ಕೋಟಿ ವೃಕ್ಷ ಅಭಿಯಾನ ಪ್ರಾರಂಭ ಮಾಡಿ, ಜಿಲ್ಲೆಯಲ್ಲಿ 1.5 ಕೋಟಿ ಗಿಡಗಳನ್ನು ನೆಟ್ಟು ಪೋಷಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವೃಕ್ಷಥಾನ್‌ ಪಾರಂಪರಿಕ ಓಟ ಇತಿಹಾಸ ನಿರ್ಮಿಸಿದೆ. 2016-17ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ಕೋಟಿ ವೃಕ್ಷ ಅಭಿಯಾನ ಆರಂಭಿಸುವ ಮೂಲಕ ಜಿಲ್ಲೆಯ ಅರಣ್ಯೀಕರಣ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಕೋಟಿ ವೃಕ್ಷ ಅಭಿಯಾನ ಪ್ರಾರಂಭ ಮಾಡಿ, ಜಿಲ್ಲೆಯಲ್ಲಿ 1.5 ಕೋಟಿ ಗಿಡಗಳನ್ನು ನೆಟ್ಟು ಪೋಷಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಪಂ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ಆಶ್ರಯದಲ್ಲಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆಗೆ ಭಾನವುಆರ ಆಯೋಜಿಸಿದ ವೃಕ್ಷಥಾನ್ ಪಾರಂಪರಿಕ ಓಟದ ಬಹುಮಾನ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಎಲ್ಲರ ಸಹಕಾರದೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಿ, ಜಿಲ್ಲೆಯ ಅರಣ್ಯ ಪ್ರದೇಶ ವಿಸ್ತೀರ್ಣ ಶೇ.0.17 ರಿಂದ ಶೇ.2ಕ್ಕೆ ತಲುಪಲು ಸಾಧ್ಯವಾಗಿದೆ. 2035ರ ಹೊತ್ತಿಗೆ ಮುಂದಿನ ಹತ್ತು ವರ್ಷಗಳಲ್ಲಿ ಜಿಲ್ಲೆಯಲ್ಲಿ 5 ಕೋಟಿ ಗಿಡ ನೆಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಅಗತ್ಯವಾಗಿದೆ.

ಭವಿಷ್ಯದಲ್ಲಿ ಪರಿಸರ ಹಾಗೂ ಭವ್ಯ ಸ್ಮಾರಕಗಳ ಸಂರಕ್ಷಣೆಯ ಕಾರ್ಯಕ್ರಮದ ಉದ್ದೇಶವಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಸ್ವಚ್ಚ ಸುಂದರ ಪರಿಸರ ಒದಗಿಸಿಕೊಡುವ ಹೊಣೆ ನಮ್ಮದು. ಈ ಮೂಲಕ ಪರಿಸರ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಪರಿಸರದ ಮಹತ್ವ ತಿಳಿಸಿಕೊಡುವುದು ಇಂದಿನ ಅಗತ್ಯವೂ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರ ಕಾಳಜಿ ಹೊಂದಬೇಕು. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಗಿಡ-ಮರಗಳನ್ನು ಬೆಳೆಸಿ ಸ್ವಚ್ಛ ಸುಂದರ ಪರಿಸರ ನಿರ್ಮಾಣ ಮಾಡುವ ಪ್ರತಿಯೊಬ್ಬರು ಕೈ ಜೋಡಿಬೇಕು.‌ ಜಿಲ್ಲೆಯಲ್ಲಿ ಹಲವಾರು ಐತಿಹಾಸಿಕ ಸ್ಮಾರಕಗಳಿವೆ. ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ಅಭಿವೃದ್ಧಿಪಡಿಸಿ ಸ್ಮಾರಕಗಳ ಬಗ್ಗೆ ವ್ಯಾಪಕ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.

ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ಜಾಗೃತಿ ಮೂಡಿಸುವ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯ ಹಸರೀಕರಣ ಹಾಗೂ ಐತಿಹಾಸಿಕ ಸ್ಮಾರಕಗಳ ಮಹತ್ವ ಸಾರುವ ಈ ವಿಶೇಷವಾದ ಕಾರ್ಯಕ್ರಮಕ್ಕೆ ಈ ಅಭೂತಪೂರ್ವ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಹಾಗೂ ಮ್ಯಾರಾಥಾನ್‍ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದ ಅವರು, ಪುರುಷರಿಗಿಂತ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಗಿರುವುದರಿಂದ ಇದೊಂದು ಅಭೂತಪೂರ್ವ ಯಶಸ್ವಿಗೆ ಕಾರಣವಾಗಿದೆ. ಎಲ್ಲರ ಸಹಭಾಗಿತ್ವದಲ್ಲಿ ಸುಂದರ ಪರಿಸರ ಕಾಪಾಡಿಕೊಂಡು ನಮ್ಮ ಮುಂದಿನ ಪೀಳಿಗೆಗೆ ನೀಡುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಹೇಳಿದರು.

ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಪೊಲೀಸ್ ಇಲಾಖೆ ಭೀಮಾಶಂಕರ ಮಾಡಗ್ಯಾಳ, ನ್ಯೂ ಮುಂಬೈನ ಅಥ್ಲಿಟ್ ಶ್ರೇಯಸ್ ಯಶವಂತ ರಾವ್, ಕೆಂಗಲಗುತ್ತಿ ಶಾಲಾ ಮುಖ್ಯೋಪಾಧ್ಯಾಯ ಹಣಮಂತ ಕಾತರಕಿ ಹಾಗೂ ಭಾರತೀಯ ಪುರಾತತ್ವ ಇಲಾಖೆ ನಿವೃತ್ತ ಸಿಬ್ಬಂದಿ ಮೌಲಾಸಾಬ ಮೈನುದ್ದೀನಸಾಬ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಿಭಾಗದ ಓಟಗಳಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ,‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ, ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿಕೆಎಂ ಪ್ರಶಾಂತ, ವೃಕ್ಷ ಅಭಿಯಾನ ಪ್ರತಿಷ್ಠಾನದ ಮಹಾಂತೇಶ ಬಿರಾದಾರ, ಸಂಚಾಲಕ ಮುರುಗೇಶ ಪಟ್ಟಣಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ತಾಲೂಕ ಮಟ್ಟದ ಅಧಿಕಾರಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಪರಿಸರ ರಕ್ಷಣೆ, ಪರಿಸರ ಪ್ರೇಮಿ ಹಾಗೂ ಪರಿಸರ ಕುರಿತು ಅಪಾರ ಕಾಳಜಿ ಹೊಂದಿದ್ದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳ ಆಶಯದಂತೆ ಸ್ವಚ್ಛ ಸುಂದರ ಹಾಗೂ ಆರೋಗ್ಯಕರ ಜಿಲ್ಲೆಯಾಗಬೇಕೆಂಬ ಆಶಯದೊಂದಿಗೆ ಈ ವೃಕ್ಷಥಾನ ಅತ್ಯಂತ ಮೆರಗಿನಿಂದ ಅಭಿಯಾನ ಹಮ್ಮಿಕೊಂಡು ಅವರ ಆಶಯದಂತೆ ಮುನ್ನಡೆಯಲಾಗುತ್ತಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿದೆ. ಈ ಕಾರ್ಯಕ್ಕೆ ಅಭೂತಪೂರ್ವ ಸಹಕಾರ ಹಾಗೂ ಪ್ರೋತ್ಸಾಹ ದೊರೆತು ಇತಿಹಾಸ ನಿರ್ಮಾಣವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.