ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಸಾಕಷ್ಟು ಅನುಕೂಲ: ಜಿಲ್ಲಾಧಿಕಾರಿ

| Published : Jun 29 2025, 01:33 AM IST

ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಸಾಕಷ್ಟು ಅನುಕೂಲ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಯೋಜನೆ ಮತ್ತು ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.

ಸರ್ಕಾರದ ಸಾಧನೆಯ ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗೆ ಎಂ.ಎಸ್. ದಿವಾಕರ ಚಾಲನೆಕನ್ನಡಪ್ರಭ ವಾರ್ತೆ ಹೊಸಪೇಟೆ

ಸರ್ಕಾರದ ಯೋಜನೆ ಮತ್ತು ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.

ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಎರಡು ವರ್ಷದ ಸಾಧನೆಗಳ ಸಮಾವೇಶವನ್ನು ಹೊಸಪೇಟೆ ನಗರದಲ್ಲಿ ಆಯೋಜಿಸಿ ಯಶಸ್ವಿಗೊಳಿಸಿರುವುದು ತೃಪ್ತಿ ನೀಡಿದೆ. ರಾಜ್ಯ ಸರ್ಕಾರ ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಶಕ್ತಿ ಯೋಜನೆ ಜಾರಿಯಿಂದಾಗಿ ವಿಜಯನಗರ ಜಿಲ್ಲೆಯ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳು ಕೋಟಿಗಟ್ಟಲೇ ಆದಾಯ ಬರುತ್ತಿದೆ. ಸಂಸ್ಥೆಯು ಮೊದಲಿಗಿಂತ ಹೆಚ್ಚಿನ ರೀತಿಯಲ್ಲಿ ಬಲವರ್ಧನೆಯಾಗಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ ಬಿ. ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆ ಹಾಕಲಾಗಿದೆ. ಯೋಜನೆಯ ಹೆಸರು, ಯೋಜನೆಯ ಮಾಹಿತಿಯ ವಿಶೇಷತೆಯೊಂದಿಗೆ ನೆರಳು ಬೆಳಕಿನ ಫಲಕಗಳು ಗಮನ ಸೆಳೆಯುತ್ತವೆ. ಈ ವಸ್ತು ಪ್ರದರ್ಶನ ವೀಕ್ಷಣೆಯು ಉಚಿತವಾಗಿರುತ್ತದೆ. ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು. ಬಸ್ ನಿಲ್ದಾಣದ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡುವ ಪ್ರತಿಮೆಯನ್ನು ನಿಲ್ಲಿಸಿ ಸೆಲ್ಫಿ ಪಾಯಿಂಟ್ ತೆಗೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌ಎನ್‌ಎಫ್ ಮಹಮ್ಮದ್‌ ಇಮಾಮ್ ನಿಯಾಜಿ, ವಾರ್ತಾ ಇಲಾಖೆಯ ಕೆ.ರಾಮಾಂಜನೇಯ, ಸಾರಿಗೆ ಇಲಾಖೆಯ ರಾಜಶೇಖರ್ ಮತ್ತಿತರರಿದ್ದರು.