ಸಾರಾಂಶ
ಹಳಿಯಾಳ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇರುವವರೆಗೂ ಜನಪರವಾದ ಪಂಚ ಗ್ಯಾರಂಟಿ ಯೋಜನೆಗಳು ಇರಲಿವೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.ಭಾನುವಾರ ತಾಲೂಕು ಆಡಳಿತ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರಿಗೆ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆಯ ಸಮಯದಲ್ಲಿ ನೀಡಿದ ವಾಗ್ದಾನದಂತೆ ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ದೇಶದಲ್ಲಿಯೇ ಮಾದರಿ ಹೆಜ್ಜೆಯನ್ನಿಟ್ಟಿದೆ ಎಂದರು. ಸರ್ಕಾರ ಅನುಷ್ಠಾನಗೊಳಿಸಿರುವ ಈ ಜನಪರ ಕಲ್ಯಾಣಕಾರಿ ಯೋಜನೆಗಳ ಲಾಭವನ್ನು ಪಡೆದು ಅಭಿವೃದ್ಧಿ ಹೊಂದಬೇಕು ಎಂದರು.
ಬುಡಕಟ್ಟು ಸಿದ್ದಿ ಸಮುದಾಯದವರು ಸರ್ಕಾರ ತಮಗೆ ನೀಡುತ್ತಿರುವ ಪೌಷ್ಟಿಕ ಆಹಾರದ ಯೋಜನೆಯ ಸದುಪಯೋಗವನ್ನು ಪಡೆದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಬೆಳೆಸಬೇಕು ಎಂದರು.ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ, ಪುರಸಭಾ ಮಾಜಿ ಅಧ್ಯಕ್ಷ ಅಜರ್ ಬಸರಿಕಟ್ಟಿ, ಮಾಲಾ ಬೃಗಾಂಜಾ, ಮಾಜಿ ಉಪಾಧ್ಯಕ್ಷ ಫಯಾಜ್ ಶೇಖ್, ಸತ್ಯಜಿತ ಗಿರಿ, ಮಾರುತಿ ಕಲಬಾವಿ, ಯುವ ಕಾಂಗ್ರೆಸ್ ಅಧ್ಯಕ್ಷ ರವಿ ತೋರಣಗಟ್ಟಿ, ಬುಡಕಟ್ಟು ಸಿದ್ದಿ ಮುಖಂಡ ಇಮಾಮಹುಸೇನ ಇದ್ದರು.