ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ ಅವರಿಗೆ ಅಂಗನವಾಡಿ ಕಾರ್ಯಕರ್ತೆಯರು ಬೆಲ್ಲದ ಆರತಿಯ ಸ್ವಾಗತ ಕೋರಿದರೆ, ಚಿಕ್ಕಮಕ್ಕಳು ಗುಲಾಬಿ ಹೂವು ಕೊಟ್ಟು ಸಚಿವರನ್ನು ಸ್ವಾಗತಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನಲ್ಲಿ ಅತಿಹೆಚ್ಚು ಅಭಿವೃದ್ಧಿ ಕೆಲಸ ಕಾರ್ಯಗಳು ನನ್ನ ಅವಧಿಯಲ್ಲೇ ಆಗಿವೆ. ಜನರು ಇದನ್ನು ಅರ್ಥೈಸಿಕೊಂಡು ಮುಂದಿನ ದಿನಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಪರ ನಿಲ್ಲಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಕಸುವಿನಹಳ್ಳಿಯಲ್ಲಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ರಸ್ತೆಗಳು ಹಾಳಾಗಿ ಜನರ ಮತ್ತು ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ಆದರೆ, ಎಲ್ಲಾ ಹಳ್ಳಿಗಳ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿಪಡಿಸಬೇಕೆಂದರೆ ನನ್ನಿಂದ ಪವಾಡ ಮಾಡಲು ಸಾಧ್ಯವಿಲ್ಲ ಎಂದರು.

ಕಸುವಿನಹಳ್ಳಿಯಿಂದ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಆದರೆ, ಬಹುಮುಖ್ಯವಾಗಿ ಆಗಬೇಕಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮೊದಲ ಆದ್ಯತೆ ಕೊಟ್ಟು ಶೀಘ್ರ ಭೂಮಿಪೂಜೆ ನೆರವೇರಿಸಲಾಗುವುದು. ಗ್ರಾಮಸ್ಥರು ಇದೇ ಪ್ರೀತಿ, ವಿಶ್ವಾಸವನ್ನು ಮುಂದಿನ ದಿನಗಳಲ್ಲಿಯೂ ತೋರಿಸಬೇಕು ಎಂದು ತಿಳಿಸಿದರು.

ಚಿಕ್ಕ ಮಕ್ಕಳಿಗೆ ಅಕ್ಷರ ಕಲಿಕೆ, ಶಿಸ್ತು, ಸ್ವಚ್ಛತೆಯ ಅಭ್ಯಾಸ ಮಾಡಿಸಲು ಮತ್ತು ಮಹಿಳೆಯರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಲು ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗಿದೆ. ಕಾರ್ಯಕರ್ತೆಯರು ಮಾತೃಸ್ವರೂಪಿಗಳಾಗಿ ಕೇಂದ್ರಕ್ಕೆ ಬರುವ ಚಿಕ್ಕ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಜೊತೆಗೆ ಶಿಸ್ತು, ಸಂಸ್ಕಾರ ಕಲಿಸಬೇಕು. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರದ ಮೂಲಕ ಸಿಗುವ ಸರ್ಕಾರದ ಸವಲತ್ತುಗಳನ್ನು ಒದಗಿಸಿ ಮಕ್ಕಳ ಹಾಗೂ ಮಹಿಳೆಯರ ಆರೋಗ್ಯ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ ಸಚಿವ ಚಲುವರಾಯಸ್ವಾಮಿ ಅವರಿಗೆ ಅಂಗನವಾಡಿ ಕಾರ್ಯಕರ್ತೆಯರು ಬೆಲ್ಲದ ಆರತಿಯ ಸ್ವಾಗತ ಕೋರಿದರೆ, ಚಿಕ್ಕಮಕ್ಕಳು ಗುಲಾಬಿ ಹೂವು ಕೊಟ್ಟು ಸಚಿವರನ್ನು ಸ್ವಾಗತಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ತಹಸೀಲ್ದಾರ್, ಲೆಫ್ಟಿನೆಂಟ್ ಜನರಲ್ ಡಾ.ಅಶೋಕ್, ತಾಪಂ ಇಒ ಬಿ.ಎಸ್.ಸತೀಶ್, ಪುರಸಭೆ ಮುಖ್ಯಾಧಿಕಾರಿ ವೀಣಾ, ಡಿವೈಎಸ್‌ಪಿ ಬಿ.ಚಲುವರಾಜು, ಸಿಡಿಪಿಒ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.