ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡುತಾಲೂಕಿನ ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ನೂರಾರು ಮಂದಿ ಗ್ರಾಮಸ್ಥರು ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣಕ್ಕೆ ಬುಧವಾರ ಬೆಳಗ್ಗೆ ಪಾದಯಾತ್ರೆ ಮೂಲಕ ಆಗಮಿಸಿದ ನೂರಾರು ಮಂದಿ ಗ್ರಾಮಸ್ಥರು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂಘಟಿತರಾಗಿ ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಸಂದೇಶ್ ಮಾತನಾಡಿ, ಮುಳ್ಳೂರು ಗ್ರಾಮದ ಬೋಧಿವೃಕ್ಷ ವೃತ್ತದಿಂದ ಟಿ. ನರಸೀಪುರ ಮುಖ್ಯ ರಸ್ತೆವರೆಗಿನ ಮಾರ್ಗ ಸಂಪೂರ್ಣ ಹಾಳಾಗಿದೆ. ಇದೇ ರಸ್ತೆಯಲ್ಲಿ ಹೊರಳವಾಡಿ, ಕುಳ್ಳಂಕನಹುಂಡಿ ಹಾಗೂ ಮುಳ್ಳೂರು ಗ್ರಾಮಸ್ಥರು ನಿತ್ಯ ಸಂಚರಿಸುತ್ತಿದ್ದು, ಕೆಲ ವಾಹನ ಸವಾರರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆ. ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಎರಡೂವರೆ ವರ್ಷಗಳಿಂದಲೂ ಈ ಬಗ್ಗೆ ಸ್ಥಳೀಯ ಶಾಸಕರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಚುನಾವಣೆಗೂ ಮುನ್ನ ಗ್ರಾಮದ ಅಭಿವೃದ್ಧಿಗೆ ನೆರವಾಗುವುದಾಗಿ ಭರವಸೆ ನೀಡಿದ್ದ ಅವರು, ಈಗ ಮುಳ್ಳೂರು ಗ್ರಾಮದ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಈಗಲಾದರೂ ಎಚ್ಚೆತ್ತುಕೊಂಡು ತಕ್ಷಣ ರಸ್ತೆ ಅಭಿವೃದ್ಧಿಗೆ ಮುಂದಾಗಬೇಕು, ಇಲ್ಲವಾದಲ್ಲಿ ಚುನಾಯಿತ ಜನಪ್ರತಿನಿಧಿಗಳ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಡಲಾಗಿರುವ ಮನವಿ ಪತ್ರವನ್ನು ತಹಸೀಲ್ದಾ ಅವರಿಗೆ ಸಲ್ಲಿಸುವ ಮೂಲಕ ಪ್ರತಿಭಟನೆ ಅಂತ್ಯಗೊಳಿಸಿದರು.ಪ್ರತಿಭಟನೆಯಲ್ಲಿ ಸಿದ್ದರಾಜು, ಬಸವರಾಜು, ಶಿವಕುಮಾರ್, ಶಿವಣ್ಣ, ಶರತ್, ಮಹೇಶ್, ಗಿರೀಶ್, ಮಹದೇವಸ್ವಾಮಿ, ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))