ಕನ್ನಡಪ್ರಭ ವಾರ್ತೆ ಹಾಸನ

ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ದೇಶಪ್ರೇಮ, ಸಾಮಾಜಿಕ ಹೊಣೆಗಾರಿಕೆ ಹಾಗೂ ವ್ಯಕ್ತಿತ್ವ ವಿಕಸನ ಬೆಳೆಸುವ ಪ್ರಮುಖ ವೇದಿಕೆಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಮಾಜಮುಖಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹಾಸನ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ರವಿಕುಮಾರ್ ತಿಳಿಸಿದರು.

ನಗರದ ಜ್ಞಾನಧಾರೆಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ಅಭಿವಿನ್ಯಾಸ (ಒರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯವು ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತವಾಗಿಲ್ಲ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವದ ಸಾಮರ್ಥ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಗುಣ, ಪರಿಸರ ಸಂರಕ್ಷಣೆ, ಸ್ವಚ್ಛತೆ, ಆರೋಗ್ಯ ಜಾಗೃತಿ ಹಾಗೂ ರಾಷ್ಟ್ರೀಯ ಏಕತೆಯಂತಹ ಮೌಲ್ಯಗಳನ್ನು ಬೆಳೆಸುವುದು ಎನ್‌ಎಸ್‌ಎಸ್‌ನ ಪ್ರಮುಖ ಉದ್ದೇಶವಾಗಿದೆ ಎಂದರು. ವಿದ್ಯಾರ್ಥಿಗಳು ಗ್ರಾಮೀಣಾಭಿವೃದ್ಧಿ, ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ಶಿಬಿರ, ಮತದಾನ ಜಾಗೃತಿ, ಸಾಕ್ಷರತಾ ಅಭಿಯಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು. ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಕಾಂತರಾಜು ಎಂ.ಎನ್. ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉತ್ತಮ ವೇದಿಕೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಯುವ ಸಮನ್ವಯಾಧಿಕಾರಿ ಜಿತ್ಯಾ, ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸಂಜಯ್ ಕುಮಾರ್, ಉಪನ್ಯಾಸಕರಾದ ಶ್ರೀನಿವಾಸ್ ಹಾಗೂ ಸುನಿಲ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೂಜಾ ಪ್ರಾರ್ಥನೆ ನೆರವೇರಿಸಿದರು.