ಸ್ವಚ್ಛತಾ ಕಾರ್ಯಗಳು ಯಾಂತ್ರೀಕರಣಗೊಳ್ಳುತ್ತಿರುವುದರಿಂದ ಭವಿಷ್ಯದಲ್ಲಿ ನಗರಗಳು ಮತ್ತು ಪಟ್ಟಣಗಳಲ್ಲಿ ಪೌರಕಾರ್ಮಿಕರ ಅವಶ್ಯಕತೆ ಕಡಿಮೆಯಾಗಬಹುದು. ಆದ್ದರಿಂದ ಈಗಿನಿಂದಲೇ ಬೇರೊಂದು ಉದ್ಯೋಗವನ್ನು ಹುಡುಕಿಕೊಂಡು ನಿಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.

ರಾಣಿಬೆನ್ನೂರು: ಸ್ವಚ್ಛತಾ ಕಾರ್ಯಗಳು ಯಾಂತ್ರೀಕರಣಗೊಳ್ಳುತ್ತಿರುವುದರಿಂದ ಭವಿಷ್ಯದಲ್ಲಿ ನಗರಗಳು ಮತ್ತು ಪಟ್ಟಣಗಳಲ್ಲಿ ಪೌರಕಾರ್ಮಿಕರ ಅವಶ್ಯಕತೆ ಕಡಿಮೆಯಾಗಬಹುದು. ಆದ್ದರಿಂದ ಈಗಿನಿಂದಲೇ ಬೇರೊಂದು ಉದ್ಯೋಗವನ್ನು ಹುಡುಕಿಕೊಂಡು ನಿಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.

ಸ್ಥಳೀಯ ನಗರಸಭೆಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ನಗರಸಭೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ, ಅರಿವು ಕಾರ್ಯಕ್ರಮ ಹಾಗೂ ಆರೋಗ್ಯ ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ಪಡೆಯಬೇಕು. ನಗರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ನಾಗರಿಕರ ಆರೋಗ್ಯವನ್ನು ರಕ್ಷಿಸುತ್ತಿರುವ ನೀವು, ನಿಮ್ಮದೇ ಆರೋಗ್ಯದ ಮೇಲೂ ವಿಶೇಷ ಗಮನ ಹರಿಸಬೇಕು. ಇದನ್ನು ಮನಗಂಡು ಈ ಯೋಜನೆ ಜಾರಿಗೆ ತರಲಾಗಿದೆ. ಸುಮಾರು 25 ಸಾವಿರ ಪೌರ ಕಾರ್ಮಿಕರನ್ನು ಕಾಯಂ ಸೇವೆಗೆ ಒಳಪಡಿಸುವ ಯೋಜನೆಯೂ ಸರ್ಕಾರದ ಮುಂದೆ ಇದ್ದು, ಹಂತ ಹಂತವಾಗಿ ಕಾಯಂಗೊಳಿಸಲಾಗುವುದು ಎಂದರು.

ಈ ಸಾಲಿನ ಬಜೆಟ್‌ನಲ್ಲಿ 750 ಕುಟುಂಬಗಳಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಯೋಜನೆ ರೂಪಿಸಲಾಗಿದೆ. ಮನೆ ನಿರ್ಮಾಣಕ್ಕೆ ಸಹಾಯಧನ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತಿದೆ. ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ತಲಾ ₹5 ಲಕ್ಷದವರೆಗೆ ವೆಚ್ಚ ಮಾಡಲಾಗುತ್ತಿದೆ. ನಿಮ್ಮ ಮಕ್ಕಳು ಇದೇ ವೃತ್ತಿಗೆ ಬಾರದಂತೆ ಉತ್ತಮ ಶಿಕ್ಷಣ ನೀಡಿ, ಅವರನ್ನು ಅಧಿಕಾರಿಗಳು, ವೈದ್ಯರು, ಎಂಜಿನಿಯರ್‌ಗಳಾಗಿ ಬೆಳೆಸಬೇಕು ಅಥವಾ ಸ್ವಂತ ಉದ್ಯೋಗಕ್ಕೆ ಪ್ರೋತ್ಸಾಹಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಸಹಾಯ ಒದಗಿಸುತ್ತದೆ ಎಂದರು.

ನಿಗಮದ ಕಾರ್ಯದರ್ಶಿ ಹಾಗೂ ವ್ಯವಸ್ಥಾಪಕ ಟಿ. ಕುಮಾರ ಮಾತನಾಡಿ, ಆರೋಗ್ಯ ವಿಮೆ ಮತ್ತು ಅಪಘಾತ ವಿಮೆ ಗರಿಷ್ಠ ₹5 ಲಕ್ಷ ಮಿತಿಯೊಳಗೆ ಲಭ್ಯವಿದ್ದು, ಸರ್ಕಾರ ನಿಗದಿಪಡಿಸಿದ ದರದಂತೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಸಿಗುತ್ತದೆ. ಸ್ಮಾರ್ಟ್ ಕಾರ್ಡ್ ಬಳಸಿ ರಾಣಿಬೆನ್ನೂರು ಸೇರಿದಂತೆ ಬೆಂಗಳೂರು, ದೆಹಲಿ, ಮುಂಬೈ ಮೊದಲಾದ ನಗರಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕ್ಯಾಶ್‌ಲೆಸ್ ಚಿಕಿತ್ಸೆ ಪಡೆಯಬಹುದು ಎಂದರು.

ಪೌರಕಾರ್ಮಿಕರು ಬೇಗನೆ ವಿವಿಧ ಕಾಯಿಲೆಗಳಿಗೆ ತುತ್ತಾಗುವ ಕಾರಣ ವಿಮಾ ಸಂಸ್ಥೆಗಳು ಹಿಂದೆ ಸರಿಯುತ್ತಿದ್ದವು. ಆದರೆ ಸರ್ಕಾರದ ಹಸ್ತಕ್ಷೇಪದಿಂದ ವಿಮಾ ಸಂಸ್ಥೆಗಳು ಸಹಕಾರ ನೀಡಲು ಮುಂದಾಗಿ, ಈ ಯೋಜನೆ ಜಾರಿಯಾಗಿದೆ. ಒಂದು ರುಪಾಯಿ ಸಹ ಖರ್ಚು ಮಾಡದೆ 3000ಕ್ಕೂ ಹೆಚ್ಚು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ವ್ಯವಸ್ಥಾಪಕ ನಿರ್ದೇಶಕ ಬಿ.ಟಿ. ಮಂಜುನಾಥ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರ ನೀಡುವ ವಿವಿಧ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ನಿಮ್ಮ ಹಿತಕ್ಕಾಗಿ ನಿಗಮದ ಅಧ್ಯಕ್ಷರು ಶ್ರಮಪಟ್ಟು ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಪೌರಾಯುಕ್ತ ಪಕ್ಕೀರಪ್ಪ ಇಂಗಳಗಿ, ಜಿಲ್ಲಾ ನಿರ್ದೇಶಕಿ ಮಾಲತಿ, ಜಿಲ್ಲಾ ಪೌರಾಡಳಿತ ನೌಕರರ ಸಂಘದ ಅಧ್ಯಕ್ಷ ಏಳುಕೋಟೆಪ್ಪ, ಕೃಷ್ಣಮೂರ್ತಿ, ಪುಟ್ಟಪ್ಪ ಮರಿಯಮ್ಮನವರ ಮತ್ತಿತರರಿದ್ದರು.