ಅರಸೀಕೆರೆ: ಶಿಥಿಲಾವಸ್ಥೆಗೆ ತಲುಪಿರುವ ಪ್ರಾಚೀನ ದೇವಾಲಯಗಳ ಜೀರ್ಣೋದ್ಧಾರವು ಕೇವಲ ಕಟ್ಟಡ ಪುನರ್‌ನಿರ್ಮಾಣವಲ್ಲ, ಭಾರತೀಯ ಸನಾತನ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮಹತ್ತರ ಕಾರ್ಯವಾಗಿದೆ ಎಂದು ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದನಂದ ಸರಸ್ವತಿ ಮಹಾಸ್ವಾಮಿಜಿ ಹೇಳಿದರು.ತಾಲ್ಲೂಕಿನ ಕಣಕಟ್ಟೆ ಗ್ರಾಮದಲ್ಲಿ ನೂತನ ಶಿಲಾಮಯ ಶ್ರೀ ಕಮಟೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಹಾಗೂ ಪುನಃಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದೇವಾಲಯಗಳು ಗ್ರಾಮಗಳ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಜೀವನದ ಕೇಂದ್ರಬಿಂದುಗಳಾಗಿವೆ. ಇಂತಹ ಪವಿತ್ರ ಕ್ಷೇತ್ರಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ದೇವಾಲಯಗಳು ಗ್ರಾಮಗಳ ಅಭಿವೃದ್ಧಿ ಹಾಗೂ ಸಾಮರಸ್ಯದ ಸಂಕೇತಗಳಾಗಿವೆ ಎಂದು ಹೇಳಿದರು.ಪ್ರಕೃತಿಯೊಂದಿಗೆ ಬೆಸೆದುಕೊಂಡ ಜೀವನ ಪದ್ಧತಿಯೇ ಭಾರತೀಯ ಸಂಸ್ಕೃತಿಯ ಮೂಲ ತತ್ವವಾಗಿದೆ. ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ; ಅವು ಮಾನಸಿಕ ನೆಮ್ಮದಿ, ಆಧ್ಯಾತ್ಮಿಕ ಚೈತನ್ಯ ಮತ್ತು ಸಾಮಾಜಿಕ ಒಗ್ಗಟ್ಟಿನ ಶಕ್ತಿಕೇಂದ್ರಗಳಾಗಿವೆ. ಅವುಗಳಲ್ಲಿ ನಿರಂತರ ಧಾರ್ಮಿಕ ಚಟುವಟಿಕೆಗಳು ನಡೆಯುವ ಮೂಲಕ ಸಮಾಜದಲ್ಲಿ ಉತ್ತಮ ಮೌಲ್ಯಗಳು ಬೆಳೆಯುತ್ತವೆ ಎಂದು ತಿಳಿಸಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಹಳೆಯ ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೈಜೋಡಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ. ಇದೇ ರೀತಿ ಜನಪ್ರತಿನಿಧಿಗಳು ಮೂಲಸೌಕರ್ಯ, ಶಿಕ್ಷಣ ಹಾಗೂ ನೀರಾವರಿ ಕ್ಷೇತ್ರಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕೂಡ ಸಮಾಜಸೇವೆಯ ಭಾಗವಾಗಿವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕೆ.ಎಂ. ಶಿವಲಿಂಗೇಗೌಡ, ಡಿ. ಸುರೇಂದ್ರಕುಮಾರ್, ದೇವರಾಜು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ವೇದಪಂಡಿತರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.