ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಯಾವುದೇ ತೊಂದರೆ ಆಗದಂತೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದೇನೆ ಎಂಬ ತೃಪ್ತಿ ಇದೆ .

ಮದ್ದೂರು: ಉತ್ತಮ ಸಮಾಜ ನಿರ್ಮಾಣ, ದೇಶಕ್ಕೆ ಭವಿಷ್ಯದ ಪ್ರಜೆಗಳನ್ನು ನೀಡುವ ಕಾಯಕದಲ್ಲಿರುವ ಶಿಕ್ಷಕರು ಹಾಗೂ ಉಪನ್ಯಾಸಕರ ವೃತ್ತಿ ಅತ್ಯಂತ ಶ್ರೇಷ್ಠ ಸ್ಥಾನ ಪಡೆದಿದೆ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಪ್ರೊ.ಕೆ.ಬಿ. ನಾರಾಯಣರವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರು, ಉಪನ್ಯಾಸಕರನ್ನು ಸದಾ ಪೂಜ್ಯ ಭಾವನೆಯಿಂದ ನೋಡುತ್ತಾರೆ. ಇದರಿಂದ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದರು.

ಪ್ರಾಂಶುಪಾಲರಾಗಿ ಪ್ರೊ.ಕೆ.ಬಿ.ನಾರಾಯಣ್ ಉತ್ತಮವಾಗಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.

ಅಭಿನಂದನೆ ಸ್ವೀಕರಿಸಿದ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ ಮಾತನಾಡಿ, ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಯಾವುದೇ ತೊಂದರೆ ಆಗದಂತೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದೇನೆ ಎಂಬ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟರು.

ಟೀಮ್ ನಾಲ್ವಡಿ ಸೇರಿದಂತೆ ಉಪನ್ಯಾಸಕರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಕೆ.ಬಿ.ನಾರಾಯಣ್ ಅವರನ್ನು ಅಭಿನಂದಿಸಿ ಗೌರವಿಸಿದರು. ಕೆ.ಬಿ.ನಾರಾಯಣ್ ಅವರ ಬಗ್ಗೆ ಉಪನ್ಯಾಸಕರು ಮೆಚ್ಚುಗೆ ಮಾತುಗಳನ್ನಾಡಿದರು.

ಪ್ರಭಾರ ಪ್ರಾಂಶುಪಾಲ ಪ್ರೊ.ರವಿ, ಡಾ.ಸಿದ್ದರಾಜು, ಪ್ರೊ.ಗಂಗಾಧರಯ್ಯ, ಪ್ರೊ.ಮಾದೇಗೌಡ, ಡಾ.ಸಿ.ಸುರೇಶ್, ಪ್ರೊ.ಲತಾಕುಮಾರಿ, ಪ್ರ.ಮಹೇಶ್ಕುಮಾರ್, ಡಾ.ಪ್ರಭಾಮಣಿ, ಡಾ.ಅಂತೋಣಿಮರಿ ಸೇರಿದಂತೆ ಇತರರು ಇದ್ದರು.