ಕನ್ನಡಪ್ರಭ ವಾರ್ತೆ ಮಳವಳ್ಳಿ

ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆಯಲ್ಲಿ ತೊಡಗಿಸಿಕೊಳ್ಳುವವರ ಬಗ್ಗೆ ಜನರೇ ಜಾಗೃತಿಗೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ನಾಜಿಯಾ ಕೌಸರ್ ತಿಳಿಸಿದರು.

ಪಟ್ಟಣದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಮಳವಳ್ಳಿ ಉಪವಿಭಾಗದ ವತಿಯಿಂದ ಆಯೋಜಿಸಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಮಾದಕ ಪದಾರ್ಥಗಳ ವ್ಯಸನದಿಂದ ವಿದ್ಯಾರ್ಥಿಗಳು, ಯುವ ಜನತೆಯ ಬದುಕು ನರಕವಾಗಿ ಕುಟುಂಬವು ಬೀದಿಗೆ ಬೀಳುತ್ತಿದೆ. ಸಮಾಜದ ಮೇಲೆ ಈ ಪಿಡುಗು ಸಾಕಷ್ಟು ದುಷ್ಪರಿಣಾಮಗಳನ್ನು ಬೀರುತ್ತಿರುವುದರಿಂದ ವಿದ್ಯಾರ್ಥಿಗಳು ಈ ಮಾದಕ ಪದಾರ್ಥಗಳ ವ್ಯಸನದ ಬಗ್ಗೆ ಜಾಗೃತಗೊಳ್ಳುವ ಜೊತೆಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.

ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್ ಮಾತನಾಡಿ, ಮಾದಕ ಪದಾರ್ಥಗಳ ವ್ಯಸನ ಯುವ ಸಮೂಹದ ಜೀವನವನ್ನು ಸರ್ವನಾಶ ಮಾಡುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣದ ಗೀಳು ಸಹ ಅವರ ಜೀವನವನ್ನು ಹಾಳು ಮಾಡುತ್ತದೆ. ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.


ಪೊಲೀಸ್ ಠಾಣಾ ಆವರಣದಿಂದ ಆರಂಭವಾದ ಜಾಥಾದಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಜಾಥಾವು ವಿವಿಧ ರಸ್ತೆಗಳಲ್ಲಿ ಸಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಜೊತೆಗೆ ನೃತ್ಯದ ಮೂಲಕ ಜಾಗೃತಿ ಮೂಡಿಸಿದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಸಿಡಿಪಿಒ ನಂಜಮಣಿ, ತಾಲೂಕು ವೈಧ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಗ್ರಾಮಾಂತರ ಸಿಪಿಐ ಬಸವರಾಜು, ಪಟ್ಟಣದ ಸಿಪಿಐ ಜಯಾನಂದ್, ಪಿಎಸ್ಐಗಳಾದ ಶಿವಲಿಂಗ ದಳವಾಯಿ, ಲೋಕೇಶ್, ಪ್ರಾಂಶುಪಾಲರಾದ ಪಿ.ಕಾವೇರಿ ಪಾಲ್ಗೊಂಡಿದ್ದರು.