ಸಾರಾಂಶ
ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಉತ್ತೇಜನಕ್ಕಾಗಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಟ್ರಸ್ಟ್ ಮೂಲಕ ಮಕ್ಕಳ ಶಾಲಾ ಶುಲ್ಕ ಭರಿಸಲಾಗಿತ್ತು. ಅಲ್ಲದೇ, ಕಳೆದ ಬಾರಿ ಹಲವು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಲಾಗಿತ್ತು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸರ್ಕಾರಿ ಶಾಲೆಗಳ ಉಳಿವಿಗೆ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸಮೀಪದ ಅಣ್ಣೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಪಠ್ಯ ಪರಿಕರಗಳನ್ನು ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಸಂಖ್ಯೆ ಕಡಿಮೆಯಾಗುತ್ತಿದೆ. ದಾಖಲಾತಿ ಹೆಚ್ಚಿಸಲು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ನಿಂದ ಬ್ಯಾಗ್ ಮತ್ತು ಪುಸ್ತಕ ಸೇರಿದಂತೆ ಪಠ್ಯ ಪರಿಕರಗಳನ್ನು ಮಕ್ಕಳಿಗೆ ವಿತರಿಸಲಾಗುತ್ತಿದೆ ಎಂದರು.ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಉತ್ತೇಜನಕ್ಕಾಗಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಟ್ರಸ್ಟ್ ಮೂಲಕ ಮಕ್ಕಳ ಶಾಲಾ ಶುಲ್ಕ ಭರಿಸಲಾಗಿತ್ತು. ಅಲ್ಲದೇ, ಕಳೆದ ಬಾರಿ ಹಲವು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಮಾಡಲಾಗಿತ್ತು ಎಂದು ವಿವರಿಸಿದರು.
ಕಳೆದೆ ಬಾರಿ ಉದಯಯಾನ 2.0 ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟ್ಯಾಪ್ ವಿತರಣೆ ಮಾಡಿದ್ದೇನೆ. ಸರ್ಕಾರಿ ಶಾಲೆಗಳು ಉಳಿಯಲು ಸರ್ಕಾರದ ಸವಲತ್ತು ಸಮರ್ಪಕವಾಗಿ ದೊರಕಬೇಕು ಎಂದರು.ಬಿಇಒ ಧನಂಜಯ ಮಾತನಾಡಿ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ನ ವಿನುತಾ ಉದಯ್ ಅವರು ಸರ್ಕಾರಿ ಶಾಲೆಗಳ ಉಳಿಸಲು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕೈ ಜೋಡಿಸಿದ್ದಾರೆ. ಕ್ಷೇತ್ರದಲ್ಲಿ ಸುಮಾರು 64 ಶಾಲಾ ಕೊಠಡಿಗಳನ್ನು ಪುನಶ್ಚೇತನ ಮಾಡಿದ್ದಾರೆ. ಮಕ್ಕಳಿಗೆ ತಾಂತ್ರಿಕ ಶಿಕ್ಷಣ ಕಲ್ಪಿಸುವ ದಿಸೆಯಿಂದ ಸ್ಮಾರ್ಟ್ ಕ್ಲಾಸ್ ಆರಂಭಿಸಲು ಕೈಜೋಡಿಸಿದ್ದಾರೆ ಎಂದರು.
ಈ ವೇಳೆ ಶಾಲಾ ಆವರಣದಲ್ಲಿ ಗಿಡ ನೆಟ್ಟು ಪರಿಸರ ಕಾಳಜಿ ಮೆರೆದರು. ಟ್ರಸ್ಟ್ ಮಹಿಳಾ ವಿಭಾಗದ ಅಧ್ಯಕ್ಷೆ ವಿನುತಾ ಉದಯ್, ಟ್ರಸ್ಟಿ ಕದಲೂರು ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿ, ಫ್ರೌಡಶಾಲಾ ವಿಭಾಗದ ಎಸ್ಡಿಎಂಸಿ ಅಧ್ಯಕ್ಷ ಪುಟ್ಟರಾಜು, ಪ್ರಾಥಮಿಕ ಶಾಲೆ ವಿಭಾಗದ ಅಧ್ಯಕ್ಷ ಬೋರೇಗೌಡ, ಕಾಲೇಜು ಅಭಿವೃದ್ಧಿ ಉಪಾಧ್ಯಕ್ಷ ರಾಘವೇಂದ್ರ, ಎಂಪಿಪಿಎಸ್ ಅಧ್ಯಕ್ಷ ಉಮೇಶ್, ಗ್ರಾಪಂ ಸದಸ್ಯರಾದ ಚಂದ್ರಶೇಖರ್, ಪಿಣ್ಣ ಸತೀಶ್ ಮುಖಂಡರಾದ ಕರಡಕೆರೆ ಮನು, ಅಣ್ಣೂರು ಮನೋಹರ್, ಅಮೀನ್ ಶಿವಲಿಂಗಯ್ಯ, ಚಿದಂಬರ ಮೂರ್ತಿ, ರಾಮಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.