ಅರಸೀಕೆರೆ: ಶಿಸ್ತು ಮತ್ತು ಸಂಯಮದ ಬದುಕಿನ ಜೊತೆಗೆ ಯುವಕರಲ್ಲಿ ದೇಶಾಭಿಮಾನ ಹಾಗೂ ಸಮಾಜ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸ್ಕೌಟ್ ಮಾಸ್ಟರ್ ಸತೀಶ್ ಕಲ್ಯಾಣಿ ಹೇಳಿದರು. ತಾಲೂಕಿನ ಬಾಣಾವರ ಪೇಟೆಯ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ ಹಾಗೂ ಚಿಂತಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಠ್ಯಪುಸ್ತಕದ ಶಿಕ್ಷಣವು ವಿದ್ಯಾರ್ಥಿಗಳ ಜ್ಞಾನಾರ್ಜನೆ ಹೆಚ್ಚಿಸಿದರೆ, ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ದೊರೆಯುವ ಜೀವನ ಶಿಕ್ಷಣವು ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ವಿದ್ಯಾಭ್ಯಾಸದ ಜೊತೆಗೆ ಗುರು ಹಿರಿಯರಿಗೆ ಗೌರವ ತೋರಿಸುವುದು ಹಾಗೂ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು. ಗೈಡ್ಸ್ ಕ್ಯಾಪ್ಟನ್ ರಾಧಾಮಣಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಆರ್. ಯಶೋಧಾ ಸೇರಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.