ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸಮುದಾಯದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ಕ್ಯಾಪ್ಟನ್ ಕೆ.ಟಿ.ಸೌಮ್ಯ ಹೇಳಿದರು.

ಕನ್ನಡಪ್ರಭವಾರ್ತೆ ಕುಶಾಲನಗರ

ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸಮುದಾಯದ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ಕ್ಯಾಪ್ಟನ್ ಕೆ.ಟಿ.ಸೌಮ್ಯ ಹೇಳಿದರು.

ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಪೋಷಕರ ಸಭೆಯಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿಯೊಂದಿಗೆ ಪೋಷಕರು, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಹಾಗೂ ಆದುನಿಕ ತಂತ್ರಜ್ಞಾನ ಬಳಕೆಯಿಂದ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ನಡೆಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ, ಶಾಲಾ ಪರಿಸರ ಅಭಿವೃದ್ಧಿ ಸೇರಿದಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಹಾಗೂ ಶಾಲಾಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವು ಹಾಗೂ ಬೆಳವಣಿಗೆಗೆ ಸಮುದಾಯ ಸಹಕರಿಸಬೇಕು ಎಂದು ಸೌಮ್ಯಪೋಷಕರಲ್ಲಿ ಮನವಿ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮದ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ ಹಾಗೂ ಕಲಿಕೆಗೆ ತಜ್ಞರಿಂದ ಮಾಹಿತಿ ಕೊಡಿಸುವುದು, ಸರ್ಕಾರಿ ಶಾಲೆ ಉಳಿವಿನಲ್ಲಿ ಗ್ರಾಮಸ್ಥರ ಪಾತ್ರ ಬಹುಮುಖ್ಯ ಸರ್ಕಾರಿ ಶಾಲೆಗಳು ಗ್ರಾಮೀಣ ಭಾರತದ ಶಿಕ್ಷಣದ ಬೆನ್ನೆಲುಬು. ಈ ಶಾಲೆಗಳಲ್ಲಿ ಇಂದಿನ‌ ದಿನಮಾನದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವೃದ್ಧಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಆಕರ್ಷಣೀಯವಾಗಿ ಮಾಡಲು ಶಾಲಾ ಶಿಕ್ಷಣ ಇಲಾಖೆ‌ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಅನುಷ್ಠಾನಕ್ಕೆ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು ಹಾಗೂ ಸಮುದಾಯದ ಸಹಕಾರ ಬೇಕು ಎಂದು ಸೌಮ್ಯ ಹೇಳಿದರು.

ಪೋಷಕರಾದ ಕೆ.ಜೆ.ಅನಿತಾ ಮತ್ತಿತರರು ಮಾತನಾಡಿದರು. ಶಾಲಾ ಸಿಬ್ಬಂದಿ ಎಂ.ಉಷಾ ಹಾಗೂ ವಿದ್ಯಾರ್ಥಿ- ಪೋಷಕರು ಇದ್ದರು.