ಕಂಪ್ಲಿ: ವೀರಶೈವ ಮಠಗಳು ಸಮಾಜದ ಶೈಕ್ಷಣಿಕ ಹಾಗೂ ಧಾರ್ಮಿಕ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ. ಸರ್ವ ಸಮುದಾಯಗಳ ಮಕ್ಕಳಿಗೆ ಅನ್ನ, ವಸತಿ, ಶಿಕ್ಷಣ ಮತ್ತು ಸಂಸ್ಕಾರ ನೀಡುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಎಮ್ಮಿಗನೂರಿನ ಹಂಪಿ ಸಾವಿರದೇವರ ಮಠದ ಪೀಠಾಧಿಪತಿ ವಾಮದೇವ ಶಿವಾಚಾರ್ಯರು ಹೇಳಿದರು.

ಪಟ್ಟಣದ ವೀರಶೈವ ಭವನದಲ್ಲಿ ವೀರಶೈವ ಲಿಂಗಾಯತ ಮಹಾವೇದಿಕೆಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ತಾಲೂಕು ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ವೀರಶೈವ-ಲಿಂಗಾಯತ ಸಮುದಾಯವು ಎಲ್ಲ ಧರ್ಮಗಳನ್ನು ಗೌರವಿಸುವ ಸಮಾನತೆಯ ತತ್ವವನ್ನು ಅನುಸರಿಸಿದ್ದು, ಸಮಾಜದಲ್ಲಿ ಸೌಹಾರ್ದ ಮತ್ತು ಸಹಬಾಳ್ವೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್ ಮಾತನಾಡಿ, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿವಿಧ ಸಮುದಾಯಗಳ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಅವರಲ್ಲಿ ಮತ್ತಷ್ಟು ಸಾಧನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮಹಾವೇದಿಕೆಯ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರ್ ತಾಲೂಕು ಕಚೇರಿ ಉದ್ಘಾಟಿಸಿ ಮಾತನಾಡಿ, ವೀರಶೈವ ಹಾಗೂ ಲಿಂಗಾಯತ ಸಮುದಾಯದ ನಡುವೆ ಅನಗತ್ಯ ಭೇದಭಾವ ಸೃಷ್ಟಿಸುವ ಪ್ರಯತ್ನಗಳು ನಡೆಯಬಾರದು ಎಂದು ಹೇಳಿದರು. ಬಸವತತ್ವ ಹಾಗೂ ರೇಣುಕಾಚಾರ್ಯರ ತತ್ವ-ಸಿದ್ಧಾಂತಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವ ಮಹತ್ವದ ವಿಚಾರಧಾರೆಗಳಾಗಿದ್ದು, ಅವುಗಳನ್ನು ಸಕಾರಾತ್ಮಕವಾಗಿ ಪ್ರಚಾರ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಗಳನ್ನು ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಕಲ್ಯಾಣಚೌಕಿಮಠದ ಬಸವರಾಜಶಾಸ್ತ್ರಿ, ಮುಸ್ಲಿಂ ಧರ್ಮಗುರು ಸೈಯದ್ ಷಾಹ್ ಅಬುಲ್ ಹಸನ್ ಖಾದ್ರಿ, ಕ್ರಿಶ್ಚಿಯನ್ ಫಾಸ್ಟರ್ಸ್ ವೆಲ್ಫೇರ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಪಾಲ್ ಪಂಪಾಪತಿ, ಮಹಾವೇದಿಕೆ ರಾಜ್ಯ ಉಪಾಧ್ಯಕ್ಷ ಬಿ.ವಿ.ಗೌಡ, ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಧರ್ಮಗಳ ಮುಖಂಡರು ಹಾಗೂ ಸಮಾಜದ ಗಣ್ಯರು ಭಾಗವಹಿಸಿದ್ದರು.

ಪ್ರಮುಖರಾದ ಪಿ. ಮೂಕಯ್ಯಸ್ವಾಮಿ, ಎಸ್.ಎಂ. ನಾಗರಾಜ, ಕೆ.ಎಂ. ಹೇಮಯ್ಯಸ್ವಾಮಿ, ಅರವಿ ಬಸವನಗೌಡ, ಎಸ್.ಎಸ್.ಎಂ. ಚನ್ನಬಸವರಾಜ, ಇಟಗಿ ಬಸವರಾಜಗೌಡ, ವಾಲಿ ಕೊಟ್ರಪ್ಪ, ವಿ. ವಿದ್ಯಾಧರ, ಹೊನ್ನಳ್ಳಿ ಗಂಗಾಧರ, ಶಿವಪುತ್ರಪ್ಪ, ಅಳ್ಳಳ್ಳಿ ವೀರೇಶ್ ಉಪಸ್ಥಿತರಿದ್ದರು.