ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವುದು ಮಾತ್ರವಲ್ಲದೆ, ಅವರ ಮುಂದಿನ ಹಂತದ ವಿದ್ಯಾಭ್ಯಾಸಕ್ಕೆ ಅಗತ್ಯವಾದ ಮಾರ್ಗದರ್ಶನ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರೇರೇಪಿಸುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಗ್ರಾಮೀಣ ಶಾಲೆಗಳಲ್ಲಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿರುವ ಭಾಗ್ಯ ಜೇಮ್ಸ್ ಪ್ರಭಾಕರ್ ಅವರ ಸೇವೆ ಶ್ಲಾಘನೀಯ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಶಿಕ್ಷಣ ನೀಡಿದ ಶಿಕ್ಷಕರನ್ನು ಅಭಿನಂದಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ನುಗ್ಗೇಹಳ್ಳಿ ಹೋಬಳಿಯ ಮುದ್ದನಹಳ್ಳಿ ಗ್ರಾಮದ ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, 40 ವರ್ಷಗಳ ಸುದೀರ್ಘ ಶಿಕ್ಷಕ ಸೇವೆ ಸಲ್ಲಿಸಿರುವ ಶಿಕ್ಷಕಿ ಭಾಗ್ಯ ಜೇಮ್ಸ್ ಪ್ರಭಾಕರ್ ಹಾಗೂ ಅಂಗನವಾಡಿ ಶಿಕ್ಷಕಿ ಮೀನಾಕ್ಷಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡುವುದು ಮಾತ್ರವಲ್ಲದೆ, ಅವರ ಮುಂದಿನ ಹಂತದ ವಿದ್ಯಾಭ್ಯಾಸಕ್ಕೆ ಅಗತ್ಯವಾದ ಮಾರ್ಗದರ್ಶನ ನೀಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರೇರೇಪಿಸುವುದು ಅತ್ಯಂತ ಮಹತ್ವದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಗ್ರಾಮೀಣ ಶಾಲೆಗಳಲ್ಲಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿರುವ ಭಾಗ್ಯ ಜೇಮ್ಸ್ ಪ್ರಭಾಕರ್ ಅವರ ಸೇವೆ ಶ್ಲಾಘನೀಯ ಎಂದು ಹೇಳಿದರು.

ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಮಾತನಾಡಿ, ತಮ್ಮ ತಂದೆಯ ಊರಾದ ಮುದ್ದನಹಳ್ಳಿ ಹಾಗೂ ತಾಯಿಯ ಊರಾದ ಜಂಬೂರು ಸೇರಿದಂತೆ ಗ್ರಾಮೀಣ ಶಾಲೆಗಳಲ್ಲಿ ಸುದೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಭಾಗ್ಯ ಜೇಮ್ಸ್ ಪ್ರಭಾಕರ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ ಎಂದರು. ಶಿಕ್ಷಣ ಬೋಧನೆಗೆ ಮಾತ್ರ ಸೀಮಿತವಾಗದೆ, ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯ ತರಬೇತಿ ನೀಡಿ, ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಿದ್ದಾರೆ. ನಾಟಕ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಉತ್ತೇಜಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಭಾಗ್ಯ ಜೇಮ್ಸ್ ಪ್ರಭಾಕರ್ ಅವರ ಸೇವೆಯನ್ನು ಗುರುತಿಸಿ ‘ಜನ ಮೆಚ್ಚಿದ ಶಿಕ್ಷಕಿ’ ಪ್ರಶಸ್ತಿ ದೊರೆತಿರುವುದು ಅವರ ಸೇವೆಯ ಮೌಲ್ಯಕ್ಕೆ ಸಾಕ್ಷಿಯಾಗಿದೆ. ಅವರ ನಿವೃತ್ತಿ ಜೀವನ ಸುಖ, ಸಂತೋಷ, ನೆಮ್ಮದಿ ಹಾಗೂ ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದರು. ಪ್ರತಿಭೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

ಗ್ರಾಮೀಣ ಕಲಾತಂಡಗಳ ಅಧ್ಯಕ್ಷೆ ಜೆ.ಎನ್. ಯಶಸ್ವಿನಿ ಮಾತನಾಡಿ, ಪ್ರತಿಯೊಬ್ಬ ಮಗುವಿನಲ್ಲಿಯೂ ಒಂದಲ್ಲ ಒಂದು ರೀತಿಯ ಕಲಾ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿ ಸೂಕ್ತ ತರಬೇತಿ ನೀಡಿದಾಗ ಮಕ್ಕಳು ನಾಟಕ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಅಗತ್ಯವಾದ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಗುಣ ಭಾಗ್ಯ ಜೇಮ್ಸ್ ಪ್ರಭಾಕರ್ ಅವರಲ್ಲಿತ್ತು. ಅವರ ಮಾರ್ಗದರ್ಶನದಲ್ಲಿ ಕಲಿತ ನೂರಾರು ವಿದ್ಯಾರ್ಥಿಗಳು ಇಂದು ತಮ್ಮದೇ ಆದ ಕ್ಷೇತ್ರಗಳಲ್ಲಿ ಭವಿಷ್ಯ ರೂಪಿಸಿಕೊಂಡು ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ರೇವರೆಂಡ್ ಜಾನ್ ಬಾಬು, ಬಿಆರ್‌ಸಿ ಅನಿಲ್, ಉಪನ್ಯಾಸಕಿ ಜೆಸ್ಮೀನ್ ಮನು, ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್, ಹಾಸನ ರಂಗಸಿರಿ ಕಲಾತಂಡದ ಕಾರ್ಯದರ್ಶಿ ಪಿ. ಸ್ಯಾಡರಕ್, ಸಿಆರ್‌ಪಿ ಮಂಜೇಗೌಡ, ಅಶೋಕ್ ಸುಂದರಂ, ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ರೇವಣ್ಣಸ್ವಾಮಿ, ಮುಖಂಡರಾದ ತೋಟಿ ನಾಗರಾಜ್, ರಾಮಣ್ಣ, ಎಂ. ಆರ್. ಮೋಹನ್ ಕುಮಾರ್‌, ನಿಶ್ಚಲ್ ಹೈಜಾಕ್, ಪ್ರಮೋದ್, ಅರುಣ ನಿಶ್ಚಲ್, ಹಾಸನದ ಕುಮಾರ್ ಬಾಬು, ಶಾಂತರಾಜ್, ಗೋಪಾಲಕೃಷ್ಣ, ಕಾಳೇಗೌಡ, ರಾಮಕೃಷ್ಣೇಗೌಡ, ಎಂ.ಕೆ. ಇಂದ್ರೇಶ್, ಸಚಿನ್, ಶಿವಣ್ಣ, ಸಂಪತ್ ಕುಮಾರ್‌, ರತೀಶ್, ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.