ಸಾರಾಂಶ
ಹೊಸಪೇಟೆ: ರಾಜ್ಯ ಕಾಂಗ್ರೆಸ್ ಸರ್ಕಾರ ಹಸಿಸುಳ್ಳು ಹೇಳಿ ರಾಜ್ಯದ ಜನರ ಹಾದಿ ತಪ್ಪಿಸುತ್ತಿದೆ. ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ. ಆದರೆ, ಇದಕ್ಕೂ ಸಿಎಂ ಸಿದ್ದರಾಮಯ್ಯ ಈ ಹಣ ಸಾಕಾಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ಮಾನದಂಡದ ಅನ್ವಯವೇ ಹಣ ಬಿಡುಗಡೆ ಮಾಡಿದೆ ಎಂದು ಮಾಜಿ ಎಂಎಲ್ಸಿ ಅಶ್ವತ್ಥ ನಾರಾಯಣಗೌಡ ತಿಳಿಸಿದರು.ನಗರದ ಪುನೀತ್ ರಾಜ್ಕುಮಾರ ಕ್ರೀಡಾಂಗಣದಲ್ಲಿ ಶನಿವಾರ ವೇದಿಕೆ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪಕ್ಕಾಗಿ ಯುಪಿಎ ಸರ್ಕಾರ ಹತ್ತು ವರ್ಷಗಳಲ್ಲಿ ₹3655 ಕೋಟಿ ನೀಡಿತ್ತು. ನಾವು ಹತ್ತು ವರ್ಷಗಳಲ್ಲಿ ₹12547 ಕೋಟಿ ಬಿಡುಗಡೆ ಮಾಡಿದ್ದೇವೆ. ಇನ್ನು ಈಗ ಬರಗಾಲ ನಿರ್ವಹಣೆಗೆ ₹3454 ಕೋಟಿ ಬಿಡುಗಡೆ ಮಾಡಿದ್ದೇವೆ. ಹೀಗಿದ್ದರೂ ಕೇಂದ್ರ ಸರ್ಕಾರ ಚೊಂಬು ನೀಡಿದೆ ಎಂದು ಹಸಿ ಸುಳ್ಳು ಹೇಳಿ ರಾಜ್ಯದ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ಕೊಡುತ್ತಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ಪ್ರಧಾನಿ ಮೋದಿ ಕಾರ್ಯಕ್ರಮದ ವೇದಿಕೆ ಮೇಲೆ 48 ಕೂರಲು ವ್ಯವಸ್ಥೆ ಮಾಡಲಾಗಿದೆ. ಮೋದಿ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ರಾಹುಲ್ ಗಾಂಧಿ ಬಳ್ಳಾರಿಯಲ್ಲಿ ತೋರಿಸಿದ ಖಾಲಿ ಚೊಂಬು ಶಾಶ್ವತವಾಗಿ ಅವರ ಕೈಯಲ್ಲಿಯೇ ಇರಲಿದೆ ಎಂದು ಮೋದಿ ಕಾರ್ಯಕ್ರಮದಲ್ಲಿ ಸಂದೇಶ ಹೋಗಲಿದೆ ಎಂದರು.
ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಎಂಎಲ್ಸಿ ವೈ.ಎಂ. ಸತೀಶ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗುರುಲಿಂಗನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಮುಖಂಡರಾದ ಸಿದ್ದಾರ್ಥ ಸಿಂಗ್, ಬಲ್ಲಾಹುಣ್ಸಿ ರಾಮಣ್ಣ, ಓದೋ ಗಂಗಪ್ಪ, ಅಯ್ಯಾಳಿ ತಿಮ್ಮಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮತ್ತಿತರರಿದ್ದರು.