ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತೆಯಡಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ಅಂಗವಿಕಲ ವೇತನವನ್ನು ಕಳೆದ ನಾಲ್ಕೈದು ತಿಂಗಳಿನಿಂದಲ್ಲೂ ನೀಡಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

- ಸಾಸ್ವೇಹಳ್ಳಿಯಲ್ಲಿ ಎಸ್‌ಐಆರ್‌ ಜನಜಾಗೃತಿ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಹಾಗೂ ಸಾಮಾಜಿಕ ಭದ್ರತೆಯಡಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ಅಂಗವಿಕಲ ವೇತನವನ್ನು ಕಳೆದ ನಾಲ್ಕೈದು ತಿಂಗಳಿನಿಂದಲ್ಲೂ ನೀಡಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ತಾಲೂಕಿನ ಸಾಸ್ವೇಹಳ್ಳಿ ಗ್ರಾಮದಲ್ಲಿ ಜುಲೈ 8ರಂದು ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆ ಹಾಗೂ ಎಸ್‌ಐಆರ್ ಬಗ್ಗೆ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ನಾವು ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಎಸ್‌ಐಆರ್ ಬಗ್ಗೆ ಜನಜಾಗೃತಿ ಮೂಡಿಸುವ ವೇಳೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ಹಾಗೂ ಗೃಹಲಕ್ಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಬಾರದೇ ತೊಂದರೆ ಉಂಟಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ₹1200 ವೇತನ ನೀಡಲಾಗುತ್ತಿತ್ತು. ಸುಳ್ಳು ಭರವಸೆ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಈಗ ವೇತನ ನೀಡಲು ಹಣ ಇಲ್ಲದೇ ಖಜಾನೆ ದಿವಾಳಿಯಾಗಿದೆ. ಸರ್ಕಾರ ಸಬೂಬು ಹೇಳದೇ ತಕ್ಷಣ ಸಾಮಾಜಿಕ ಭದ್ರತೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಮಾಶಾಸನ ನೀಡಬೇಕು ಎಂದರು.

ಚುನಾವಣೆಗೆ ಮುಂಚೆ ಅಧಿಕಾರಕ್ಕೆ ಬರುವುದರ ಭರದಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸುಳ್ಳು ಭರವಸೆ ನೀಡಿದ ಕಾಂಗ್ರೆಸ್‌ ಮುಖಂಡರು ಈಗ ಏಕಾಏಕಿ ಗೃಹಲಕ್ಷ್ಮಿ ಯೋಜನೆಯನ್ನೇ ನಿಲ್ಲಿಸಿದ್ದಾರೆ. ಅದನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಬಡ ಹಾಗೂ ಮಧ್ಯಮ ವರ್ಗದವರ ಪಾಡೇನು ಎಂದರು.

ಖಾಸಗಿಕರಣಕ್ಕೆ ವಿರೋಧ:

ಸರ್ಕಾರ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿದಂತೆ ವಿವಿಧ ನಿಗಮಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದಕ್ಕೆ ಬಿಜೆಪಿ ವಿರೋಧಿಸುತ್ತದೆ. ಖಾಸಗೀಕರಣ ಮಾಡಿದರೆ ವಿದ್ಯುತ್ ಬಿಲ್ ಹೆಚ್ಚಾಗುತ್ತದೆ. ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಸೌಲಭ್ಯ ರದ್ದಾಗುತ್ತದೆ. ಎಷ್ಟೋ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ ಇದೆ ಎಂದು ಹೇಳಿದರು.

ಮುಖಂಡರಾದ ಶುಂಠಿ ಬಾಬು, ರೇಣು, ಶುಂಠಿ ರವಿ, ರಮೇಶ್, ಕೆಲವು ಸಂಧ್ಯಾ, ವಿಧವಾ, ಅಂಗವಿಕಲ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು.

- - -

(ಬಾಕ್ಸ್‌) * ಇಂದು ತಾಲೂಕು ಕಚೇರಿಗೆ ಮುತ್ತಿಗೆ ವಿದ್ಯುತ್ ಖಾಸಗೀಕರಣ, ಗೃಹಲಕ್ಷ್ಮೀ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಹಾಗೂ ಅಂಗವಿಕಲ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅರ್ಹರಿಗೆ ಪಡಿತರ ಚೀಚಿ ನೀಡಿಲ್ಲ ತಕ್ಷಣ ಬಿಪಿಎಲ್ ಕಾರ್ಡ್ ಇಲ್ಲವದರಿಗೂ ಹೊಸದಾಗಿ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.8ರಂದು ಟಿ.ಬಿ. ವೃತ್ತದಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ಯೋಜನೆ ಪಿಂಚಣಿ ಪಡೆಯುತ್ತಿರುವವರು, ರೈತರು, ಕಾರ್ಯಕರ್ತರು ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

- - -

-7ಎಚ್.ಎಲ್,ಐ1:

ತಾಲೂಕು ಬಿಜೆಪಿ ಘಟಕದಿಂದ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಹಾಗೂ ಎಸ್‌ಐಆರ್ ಜಾಗೃತಿ ಸಭೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.