ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನವದೆಹಲಿಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡ ಅವರನ್ನು ಕರ್ನಾಟಕದ ಬಿಜೆಪಿ ಸಂಸದರ ನಿಯೋಗ ಭೇಟಿಯಾಗಿ ರಾಜ್ಯದಲ್ಲಿ ರಸಗೊಬ್ಬರದ ವಿತರಣೆಯಲ್ಲಿ ಆಗಿರುವ ಗೊಂದಲ ಕುರಿತು ಚರ್ಚಿಸಿ ಮಾಹಿತಿ ಪಡೆದರು.ನಂತರ ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಪ್ರಸಕ್ತ ಬಿತ್ತನೆ ಋತುವಿಗೆ ಕರ್ನಾಟಕಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಪೂರೈಸಲು ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಕರ್ನಾಟಕದ ಬೇಡಿಕೆಗೆ ಸ್ಪಂದಿಸಿ ಕೇಂದ್ರ ಸರ್ಕಾರ ಜುಲೈ ಅಂತ್ಯಕ್ಕೆ ಒಟ್ಟು 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಿದ್ದು, ರಾಜ್ಯದಲ್ಲಿ ಈವರೆಗೆ ಸುಮಾರು 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿದೆ ಎಂದರು.
ರಾಜ್ಯದಲ್ಲೇ ಯೂರಿಯಾ ದಾಸ್ತಾನುಬಾಕಿ ಉಳಿದಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಾಜ್ಯದ ಗೋದಾಮಿನಲ್ಲಿ ದಾಸ್ತಾನು ಇರುವುದಾಗಿ ಕೇಂದ್ರ ಸಚಿವ ನಡ್ಡಾ ಮಾಹಿತಿ ನೀಡಿದ್ದು, ಹೆಚ್ಚುವರಿಯಾಗಿ ಸುಮಾರು 16 ಸಾವಿರ ಟನ್ ರಸಗೊಬ್ಬರವನ್ನು ರಾಜ್ಯಕ್ಕೆ ಕಳುಹಿಸಿಕೊಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ದಾ ಅವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.
ಕ್ಷುಲ್ಲಕ ರಾಜಕೀಯ ಬೇಡರಾಜ್ಯದ ರೈತರಿಗೆ ಅಗತ್ಯವಿರುವ ರಸಗೊಬ್ಬರನ್ನು ಸಕಾಲಕ್ಕೆ ಸರಬರಾಜು ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಲಭ್ಯವಿರುವ ರಸಗೊಬ್ಬರನ್ನು ಸಮರ್ಪಕವಾಗಿ ವಿತರಣೆ ಮಾಡುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ಷುಲ್ಲಕ ರಾಜಕೀಯ ಬಿಟ್ಟು ರೈತರ ಹಿತದೃಷ್ಟಿಯಿಂದ ಸಮರ್ಪಕ ವಿತರಣೆ ಕಡೆ ಗಮನ ಹರಿಸಬೇಕು ಎಂಬುದೇ ನಮ್ಮೆಲ್ಲರ ಆಗ್ರಹವಾಗಿದೆ ಎಂದು ತಿಳಿಸಿದರು.ನಿಯೋಗದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ, ಸಂಸದರಾದ ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ , ಪಿ.ಸಿ.ಗದ್ದಿಗೌಡರ್, ರಮೇಶ ಜಿಗಜಿಣಗಿ, ಕ್ಯಾ.ಬ್ರಿಜೇಶ್ ಇದ್ದರು.