ರಾಜ್ಯ ಸಮುದಾಯ ವೈದ್ಯರ ಮುಷ್ಕರ ಶುರು

| Published : Feb 11 2024, 01:50 AM IST

ಸಾರಾಂಶ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಮುದಾಯ ಆರೋಗ್ಯ ಅಧಿಕಾರಿಗಳು ಫೆ.15ರಿಂದ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಕಾಯಂಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.15ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾಗಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‌ಎಚ್‌ಎಂ ಗುತ್ತಿಗೆ ನೌಕರರ ಸಂಘ ತಿಳಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಚನ್ನಪ್ಪನಾಯ್ಕ್‌ ಬಣಕಾರ, ರಾಜ್ಯದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ 6195 ಸಮುದಾಯ ಆರೋಗ್ಯ ಅಧಿಕಾರಿಗಳಿದ್ದು, ಆರೋಗ್ಯ ಸೇವೆ, ಆನ್‌ಲೈನ್‌ ಎಂಟ್ರಿ ಸೇರಿ ಎಲ್ಲ ಕೆಲಸವನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದರು.

2016-17ರಿಂದ ಸೇವೆಯಲ್ಲಿದ್ದು, ಆರು ವರ್ಷ ಪೂರೈಸಿದ ಎಲ್ಲ ಸಿಬ್ಬಂದಿಯನ್ನು ಕಾಯಂ ಮಾಡಬೇಕು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಇತರೆ ನೌಕರರಿಗೆ ನೀಡಿದಂತೆ ಶೇ. 15ರಷ್ಟು ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ನೀಡಬೇಕು. ತಡೆಹಿಡಿದ ಶೇ. 5ರಷ್ಟು ವಾರ್ಷಿಕ ವೇತನ, ಶೇ 10ರಷ್ಟು ಬೋನಸ್ ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು.

ವಿನಾಕಾರಣ ವಜಾಗೊಳಿಸಿದ ಎಲ್ಲ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಮಾಸಿಕ ₹15 ಸಾವಿರ ಪ್ರೋತ್ಸಾಹ ಧನ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು. ಆರೋಗ್ಯ, ಕ್ಷೇಮ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತಾ ಸೇವೆ ಇತರೆ ಔಷಧಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಒತ್ತಾಯಿಸಿದರು.