ಸಾರಾಂಶ
ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಮುಷ್ಕರ ೩ ದಿನ ಪೂರೈಸಿದೆ. ಈ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘಗಳು ಬುಧವಾರ ಬೆಂಬಲ ಸೂಚಿಸಿದವು.
ಕನ್ನಡಪ್ರಭ ವಾರ್ತೆ ತಿಪಟೂರು
ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಅದರಂತೆ ತಿಪಟೂರು ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಮುಷ್ಕರ ೩ ದಿನ ಪೂರೈಸಿದೆ. ಈ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘಗಳು ಬುಧವಾರ ಬೆಂಬಲ ಸೂಚಿಸಿದವು.ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಈ. ರಮೇಶ್ ಭೇಟಿ ನೀಡಿ ಮಾತನಾಡಿ, ಆಡಳಿತಾಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ ನಮ್ಮ ಸಂಘ ಬೆಂಬಲ ನೀಡುತ್ತಿದೆ ಎಂದರು.
ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಗ್ರಾಮಾಡಳಿತಾಧಿಕಾರಿಗಳ ಸಂಘದ ಹೋರಾಟಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬಾಹ್ಯ ಬೆಂಬಲ ನೀಡುತ್ತಿದ್ದು, ಸರ್ಕಾರ ಕೂಡಲೇ ಗಮನಹರಿಸಿ ಇವರ ಬೇಡಿಕೆ ಪೂರೈಸುವಂತೆ ಆಗ್ರಹಿಸಿದರು.ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಹಲವಾರು ವರ್ಷಗಳಿಂದಲೂ ನಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡುತ್ತಾ ಬರುತ್ತಿದ್ದು, ಆದರೆ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ನಮ್ಮ ನ್ಯಾಯಯುತ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಪ್ರತಿಭಟನೆಯಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ಖಜಾಂಚಿ ಕೆ.ಎಂ. ಅಶೋಕ್, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮುಖಂಡರಾದ ದೀಪಕ್ ಬೂದಾಳ್, ಶಿವರಾಮ್, ಶ್ರೀಹರ್ಷ, ರವಿಶಂಕರ್, ಭವ್ಯ, ರಾಜು ಮತ್ತಿತರರಿದ್ದರು