ವಿದ್ಯಾರ್ಥಿಗಳಲ್ಲಿ ಓದುವ ಪ್ರವೃತ್ತಿ ಹೆಚ್ಚಾಗಬೇಕು. ಪಠ್ಯ ಮತ್ತು ಸಹಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಯು.ಬಿ. ಬಣಕಾರ ಹೇಳಿದರು.
ಹಿರೇಕೆರೂರು: ವಿದ್ಯಾರ್ಥಿಗಳಲ್ಲಿ ಓದುವ ಪ್ರವೃತ್ತಿ ಹೆಚ್ಚಾಗಬೇಕು. ಪಠ್ಯ ಮತ್ತು ಸಹಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಯು.ಬಿ. ಬಣಕಾರ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಉನ್ನತ ಕನಸುಗಳನ್ನು ಕಟ್ಟಕೊಂಡು ಕಂಡ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ಸದಾ ಕ್ರೀಯಾಶೀಲರಾಗಿದ್ದುಕೊಂಡು, ಏಕಾಗ್ರತೆಯಿಂದ ಸತತ ಅಭ್ಯಾಸ ಮಾಡಿ ಜ್ಞಾನ ಸಂಪಾದನೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಬೇಡಿಕೆಗಳು ಮತ್ತು ಅಗತ್ಯಗಳನ್ನು ಶೀಘ್ರದಲ್ಲಿ ಕಾರ್ಯಗತಗೊಳಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಅಭಿಜ್ಞಾನ ಶೀರ್ಷಿಕೆಯ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಹಾವೇರಿಯ ಎಂ.ಆರ್.ಎಂ. ಪಿಯು ಕಾಲೇಜಿನ ಪ್ರಾಚಾರ್ಯ ಡಾ. ರಾಮ ಮೋಹನರಾವ್ ರವರು ಮಾತನಾಡಿ, ವಿದ್ಯಾರ್ಥಿಗಳು ಇಂದಿನ ದಿನಮಾನಗಳಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಜತೆಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಸ್ತುಬದ್ಧ ಅಧ್ಯಯನ ಮಾಡಿ ತಮ್ಮ ಗುರಿಯ ಕಡೆಗೆ ಹೋಗುವ ನಿಟ್ಟಿನಲ್ಲಿ ತಮ್ಮನ್ನು ಅಣಿಗೊಳಿಸಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ವೀರನಗೌಡ ಹುಡೇದ, ವಿದ್ಯಾರ್ಥಿಗಳು ತಂದೆ-ತಾಯಿಗಳ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಮಯ ವ್ಯರ್ಥ ಮಾಡದೇ, ಕಾಲೇಜಿನ ಪಾಠ-ಪ್ರವಚನಗಳು ಹಾಗೂ ಗ್ರಂಥಾಲಯದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಸುಜಾತ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಶಂಭುಲಿಂಗಪ್ಪ ತಂಬಾಕದ, ಮಹೇಂದ್ರ ಬಡಳ್ಳಿ, ರಾಮನಗೌಡ ತೆಂಬದ, ಜಗದೀಶ್ ಕಲ್ಯಾಣಿ, ಸಿರಾಜ್ ಅಹ್ಮದ್ ನಾಲಬಂದಿ, ಎಂ. ಎನ್. ಕಚವಿ, ಕಾಲೇಜಿನ ಪ್ರಾಧ್ಯಾಪಕರಾದ ಡಾ|ಗಂಗರಾಜು, ಎ.ಬಿ. ಪೂಜಾರಿ, ಹರೀಶ್ ಡಿ., ಸುಮಲತಾ ಬಿ. ಎನ್., ಸುರೇಂದ್ರಬಾಬು ಎಚ್., ಎಸ್., ಮಂಜುನಾಥ ಟಿ. ಕೆ., ರಂಜಿತಾ ಬಿ. ಎಲ್., ಸಂತೋಷಕುಮಾರ, ಎಸ್. ಜಿ. ಡಾ|ಮಂಜುನಾಥ ಚಲವಾದಿ, ಗೀತಾ ಎಂ., ಚೇತನ್ ನಡುವಿನಮಠ, ಷಣ್ಮುಖ ಮತ್ತೂರ, ಎ. ಎಸ್. ರಾಜು, ಕಾಂತೇಶರೆಡ್ಡಿ ಗೋಡಿಹಾಳ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು. ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.