ಪ್ರಧಾನಿ ಯೋಗ್ಯತೆ ಇರುವವರು ಬಹಳಷ್ಟು ಜನರಿದ್ದಾರೆ: ಸಿದ್ದರಾಮಯ್ಯ

| Published : Apr 24 2024, 02:19 AM IST

ಪ್ರಧಾನಿ ಯೋಗ್ಯತೆ ಇರುವವರು ಬಹಳಷ್ಟು ಜನರಿದ್ದಾರೆ: ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ಕನ್ನಡಪ್ರಭ ವಾರ್ತೆ ತುಮಕೂರುನಮ್ಮಲ್ಲಿ ಪ್ರಧಾನಿಯಾಗುವ ಯೋಗ್ಯತೆ ಇರುವ ಬಹಳಷ್ಟು ಜನರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ನಗರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇವೇಗೌಡರು ದೇಶದ ಪ್ರಧಾನಿಯಾಗುವಾಗ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿರಲಿಲ್ಲ. ಅದೃಷ್ಟದಿಂದ ಪ್ರಧಾನಿಯಾದರು. ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಯವರಿಗಿಂತ ಕಡಿಮೆ ಏನಿಲ್ಲ. ನರೇಂದ್ರ ಮೋದಿ ಅವರನ್ನು ಬಿಟ್ಟರೆ ಯಾರಿಲ್ಲ ಎನ್ನುತ್ತಾರೆ. ಒಂದು ಕಾಲದಲ್ಲಿ ನೆಹರೂ ಅವರ ನಂತರ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನ್ ಮೋಹನ್ ಸಿಂಗ್ ಅವರು ಉತ್ತಮ ಕೆಲಸ ಮಾಡಲಿಲ್ಲವೇ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಬಿಟ್ಟರೆ ಪ್ರಧಾನಿಯಾಗಲು ಯಾರೂ ಇಲ್ಲ ಎಂದು ದೇವೇಗೌಡರು ಸ್ವಾರ್ಥಕ್ಕಾಗಿ ಹೇಳುತ್ತಾರೆ. ದೇವೇಗೌಡರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ನರೇಂದ್ರ ಮೋದಿಯವರನ್ನು ಹಾಡಿ ಹೊಗಳುವ ಮಟ್ಟಕ್ಕೆ ಹೋದರೆಂದು ವ್ಯಥೆಯಾಗುತ್ತಿದೆ. ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನವನ್ನು ಜನತೆ ಮಾಡಬೇಕು ಎಂದು ತಿಳಿಸಿದರು.

ಸಂಸತ್ತಿನಲ್ಲಿ ನಿಮ್ಮ ಧ್ವನಿಯನ್ನು ಸಮರ್ಥವಾಗಿ ಪ್ರತಿನಿಧಿಸುವ ವ್ಯಕ್ತಿ ಸಂಸತ್ತಿಗೆ ಹೋಗಬೇಕು. ರಾಜ್ಯದ ಹಿತ ಕಾಪಾಡುವವರು ಸಂಸತ್ತಿನಲ್ಲಿದ್ದರೆ ರಾಜ್ಯಕ್ಕೆ ಉತ್ತಮ. ಮೋದಿಯವರು ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಬಿಜೆಪಿಯವರು ರಾಜ್ಯದ ಜನರಿಗೆ ಖಾಲಿ ಚೊಂಬನ್ನು ನೀಡಿದ್ದಾರೆ. ಆದರೆ ದೇವೇಗೌಡರು ಖಾಲಿ ಚೊಂಬನ್ನು ಅಕ್ಷಯಪಾತ್ರೆಯೆಂದು ಸುಳ್ಳು ಹೇಳುತ್ತಿದ್ದಾರೆ ಎಂದರು.

ಸಚಿವರಾದ ಪರಮೇಶ್ವರ್, ಕೆ.ಎ ನ್.ರಾಜಣ್ಣ, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಮತ್ತಿತರರು ಇದ್ದರು.