2011ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಇನ್ನೂ ಪೋಲಿಯೋ ಭೀತಿ ಇದೆ. ಹೀಗಾಗಿ ಲಸಿಕೆ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್‌ ಸುಧಾಕರ ಲೋಖಂಡೆ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

 2011ರಿಂದ ಭಾರತ ದೇಶದಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಆದರೆ, ಇನ್ನೂ ಪೋಲಿಯೋ ಭೀತಿ ಇದೆ. ಹೀಗಾಗಿ ಲಸಿಕೆ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್‌ ಸುಧಾಕರ ಲೋಖಂಡೆ ಹೇಳಿದರು.

ನಗರದ ಮಿಳಘಟ್ಟ ಸರ್ಕಾರಿ ಶಾಲೆಯಲ್ಲಿ ಭಾನುವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾ‍ರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಪೋಲಿಯೋ ಮುಕ್ತ ದೇಶವಾದರೂ ಆಫ್ಘಾನಿಸ್ತಾನ, ಪಾಕಿಸ್ತಾನ ಇತರೆ ಕೆಲವು ದೇಶಗಳಲ್ಲಿ ಇನ್ನೂ ಭೀತಿ ಇರುವ ಕಾರಣ ನಮ್ಮ ದೇಶದಲ್ಲೂ ಮರುಕಳಿಸಬಹುದೆಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ಮಾಡಲಾಗುತ್ತಿದೆ. 

ಜಿಲ್ಲೆಯಲ್ಲಿ 5ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. 

ಡಿಎಚ್‌ಒ ಡಾ.ರಾಜೇಶ್‌ ಸುರಗಿಹಳ್ಳಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ 1997 ರಿಂದ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ಭೀತಿ ಇರುವುದರಿಂದ ಪೋಲಿಯೋ ಅಭಿಯಾನ ನಡೆಸಲಾಗುತ್ತಿದೆ. 

ಜಿಲ್ಲೆಯಯಿಂದ 5 ವರ್ಷದೊಳಗಿನ 1,20,62 ಮಕ್ಕಳಿಗೆ ಒಟ್ಟು 1037 ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ರೋಟರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕಾ‍ರ್ಯಕ್ರಮ ಯಶಸ್ವಿಯಾಗಲಿದೆ ಎಂದರು. 

ಡಾ.ಪಿ.ನಾರಾಯಣ್‌ ಮಾತನಾಡಿ, ಮೊದಲು ಪೋಲಿಯೋ ಭೀಕರತೆ ಹೆಚ್ಚಿತ್ತು. ವರ್ಷಕ್ಕೆ ಸುಮಾರು ಸಾವಿರ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿತ್ತು. ಈಗ 10 ರಿಂದ 12 ಮಕ್ಕಳು ಬಲಿಯಾಗುತ್ತಿದ್ದಾರೆ.

 ಭಾರತ ಪೋಲಿಯೋ ಮುಕ್ತವಾದರೂ ಕೆಲ ದೇಶಗಳಲ್ಲಿ ಇದು ಇರುವ ಭೀತಿಯಿಂದಾಗಿ ನಾವು ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ವಿವೇಕ್‌ ದೊರೈ, ಆರ್‌ಸಿಎಚ್‌ ಅಧಿಕಾರಿ ಡಾ.ನಾಗರಾಜ್‌ನಾಯ್ಕ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಒ.ಮಲ್ಲಪ್ಪ, ಟಿಎಚ್‌ಒ ಡಾ.ಚಂದ್ರಶೇಖರ್‌, ರೋಟರಿ ಸಂಸ್ಥೆಯ ರಾಜೇಂದ್ರ ಪ್ರಸಾದ್‌, ಕೋಟೊಜಿ ರವಿ, ವಿಜಯಕುಮಾರ್‌ ಮತ್ತಿತರರು ಇದ್ದರು.