ಕನ್ನಡಪ್ರಭ ವಾರ್ತೆ, ಬೆಂಗಳೂರು

ಹಿಂದಿ ಭಾಷೆಯನ್ನು ಪರೀಕ್ಷೆಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿರುವ ಕನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪ್ರತಿಕೃತಿ ದಹಿಸಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಗರದ ಆನಂದರಾವ್‌ ವೃತ್ತದಲ್ಲಿ ಕರವೇ ಬೆಂಗಳೂರು ನಗರ ಜಿಲ್ಲಾ ಘಟಕದ ಮಹಿಳಾ ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಸೇರಿದಂತೆ ಹಿಂದಿ ಹೇರಿಕೆ ಪರವಾಗಿ ಮಾತನಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಮಾಜಿ ಸಚಿವರಾದ ಶ್ರೀರಾಮುಲು, ಸುರೇಶ್‌ ಕುಮಾರ್‌ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಬೆಂಗಳೂರು ನಗರ ಜಿಲ್ಲಾಧ್ಯಕ್ಷೆ ಶ್ವೇತಾ ಮೋಹನ್ ಅವರು, ತಮಗೆ ಮತ ಹಾಕಿ ಗೆಲ್ಲಿಸಿರುವ ಕನ್ನಡದ ಜನತೆ ಪರವಾಗಿ ನಿಲ್ಲುವುದನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಲಿಯಬೇಕು. ಹಿಂದಿವಾಲಾಗಳ ಪರವಾಗಿ ನಿಂತಿರುವ ಕರಂದ್ಲಾಜೆ ಅವರು ಮೊದಲು ಕನ್ನಡ ನುಡಿಯನ್ನು ಪ್ರೀತಿಸಲು ಕಲಿಯಲಿ ಎಂದರು.

ಭಾರತೀಯ ಜನತಾ ಪಕ್ಷದ ಅಧಿಕಾರವಿರುವ ರಾಜ್ಯಗಳಲ್ಲಿ ಇಂಗ್ಲಿಷ್‌ ಮತ್ತು ಹಿಂದಿ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಅಲ್ಲಿನ ಮಕ್ಕಳು ಎರಡು ಭಾಷೆ ಕಲಿಯುತ್ತಿರುವಾಗ ಕರ್ನಾಟಕದ ಮಕ್ಕಳು ಯಾಕೆ ಮೂರನೇ ಭಾಷೆಯ ಹೊರೆ ಹೊತ್ತುಕೊಳ್ಳಬೇಕು? ಬಿಜೆಪಿ ನಾಯಕರಿಗೆ ಈ ಸಾಮಾನ್ಯ ಜ್ಞಾನವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.