ಸಾರಾಂಶ
ಶಿಗ್ಗಾಂವಿ: ಶಿಗ್ಗಾಂವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಹೊಸ ಯುವಕರ ತಂಡ ನಮ್ಮ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ ಎಂದರು.ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ ಆಗಿದ್ದು, ಅಲ್ಲಿನ ಸ್ಥಳೀಯ ಸಂಸ್ಥೆಯ ಜನ ಪ್ರತಿನಿಧಿಗಳು ನಮ್ಮ ಪರವಾಗಿದ್ದಾರೆ. ಅಲ್ಲದೇ, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರು ಮತ ಹಾಕಿದ್ದಾರೆ. ಅಲ್ಲಿ ಪ್ರಜ್ಞಾವಂತ ಮತದಾರರಿದ್ದಾರೆ ಎಂದರು.ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಎರಡು ಸಾವಿರ ಕೋಟಿ ಅನುದಾನ ಕೊಟ್ಟಿಲ್ಲ. ಇವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡದಿರುವುದರಿಂದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು.ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಕುಟುಂಬದವರು ಬಿಟ್ಟರೆ ಬೇರೆಯವರು ಅಭ್ಯರ್ಥಿ ಆಗುವುದಿಲ್ಲ ಎಂಬ ಕಾಂಗ್ರೆಸ್ಸಿನವರ ಹೇಳಿಕೆ ಕುರಿತು ಕೇಳಿದ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ಸಿಗೆ ಅಭ್ಯರ್ಥಿ ಇಲ್ಲ ಎನ್ನುವುದು ಈಗಾಗಲೇ ಸಾಬೀತಾಗಿದೆ. ಅಲ್ಲಿ ಕುಮಾರಸ್ವಾಮಿಯವರ ವರ್ಚಸ್ಸು ಚೆನ್ನಾಗಿದೆ. ಈ ಎಲ್ಲ ಪ್ರಕ್ರಿಯೆ ನಡುವೆ ಜನರು ಕಾಂಗ್ರೆಸ್ ತಿರಸ್ಕಾರ ಮಾಡುತ್ತಾರೆ ಎಂದು ಹೇಳಿದರು.