ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 500 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಎಲ್ಲಿಯೂ ಸದ್ಯಕ್ಕೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿಲ್ಲ. ಆದರೆ, ಮುಂಬರುವ ಬೇಸಿಗೆ ಸಂದರ್ಭದಲ್ಲಿ 126 ಗ್ರಾಮ ಪಂಚಾಯತಿಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಅವುಗಳ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತಿಗೂ ಸ್ವಂತ ಟ್ಯಾಂಕರ್‌ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದಲೂ ನೀರು ಪೂರೈಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಘಟಪ್ರಭಾ, ಮಲಪ್ರಭಾ ಹಾಗೂ ರಕ್ಕಸಕೊಪ್ಪ ಜಲಾಶಯಗಳ ನೀರಿನ ಮಟ್ಟದ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗಿದೆ. ಸಮಸ್ಯೆ ಎದುರಾಗುವ ಗ್ರಾಮಗಳಿಗೆ ಆದ್ಯತೆಯ ಮೇರೆಗೆ ನೀರು ಪೂರೈಕೆ ಮಾಡಲಾಗುತ್ತದೆ. ಜೊತೆಗೆ ರೈತರ ಬೆಳೆಗೆ ನೀರು ಒದಗಿಸಲು ಕೂಡ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಭೆಯನ್ನು ಕೂಡ ನಡೆಸಲಾಗಿದೆ ಎಂದದೆ ಎಂದರು.ನಗರ ಪ್ರದೇಶಗಳಲ್ಲಿ ಬೇಸಿಗೆ ದಿನಗಳಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮುಂದುವರೆಯಲಿದೆ. ಆದರೆ ಅನಾವಶ್ಯಕವಾಗಿ ಹೆಚ್ಚಿನ ಹಣ ವಸೂಲಿ ಮಾಡುವ ಟ್ಯಾಂಕರ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಹೊಟೇಲ್‌ ಸೇರಿದಂತೆ ಇತರೆ ವಾಣಿಜ್ಯ ಬಳಕೆದಾರರಿಗೆ ದಿನವೂ ಸುಮಾರು 1700 ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದೆ. ಸಣ್ಣ ವ್ಯಾಪಾರಿಗಳ ಸಮಸ್ಯೆಗಳ ಪರಿಹಾರಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲ ಹೊಟೇಲ್‌ಗಳು ಪರ್ಯಾಯ ಇಂಧನವನ್ನು ಬಳಸುತ್ತಿವೆ. ಹೊಟೇಲ್‌ ಮಾಲೀಕರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗಿದೆ. ಸದ್ಯಕ್ಕೆ ಹೊಟೇಲ್‌ ಉದ್ಯಮದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ಸ್ಪಷ್ಟಪಡಿಸಿದರು.-----ಬಾಕ್ಸ್ಆಟೋ ಗ್ಯಾಸ್ ಸಮಸ್ಯೆಗೆ ನೋಡಲ್ ಅಧಿಕಾರಿ ನೇಮಕ

ಬೆಳಗಾವಿ ನಗರದಲ್ಲಿ ಆಟೋ ಗ್ಯಾಸ್‌ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ನಗರದಲ್ಲಿ 7 ಸಿಎನ್‌ಜಿ ಬಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸರಬರಾಜು ನಿರಂತರವಾಗಿದೆ. ಆದರೆ, ಆಟೋ ಎಲ್‌ಪಿಜಿ ಪೂರೈಕೆಯಲ್ಲಿ ಸಾಕಷ್ಟು ಸಮಸ್ಯೆಯಾಗಿದೆ. ನಗರದಲ್ಲಿನ 6 ಎಲ್‌ಪಿಜಿ ಬಂಕ್‌ಗಳಲ್ಲಿ, ವಿಶೇಷವಾಗಿ ಜಿಯೋ ಮತ್ತು ಗೋ ಗ್ಯಾಸ್‌ ಬಂಕ್‌ಗಳಲ್ಲಿ ಪೂರೈಕೆ ತೊಂದರೆ ಎದುರಾಗುತ್ತಿದೆ. ಇದು ಕೇವಲ ಬೆಳಗಾವಿ ಸಮಸ್ಯೆಯಲ್ಲ, ರಾಜ್ಯ ಮತ್ತು ದೇಶದ ಮಟ್ಟದಲ್ಲಿಯೂ ಇಂತಹದೇ ಪರಿಸ್ಥಿತಿ ಕಾಣಿಸಿಕೊಂಡಿದೆ ಎಂದು ಹೇಳಿದರು.

ಈಗಾಗಲೇ ಮಂಗಳೂರು ಮತ್ತು ಗುಜರಾತಿ ರಾಜ್ಯಗಳಿಂದ ಎಲ್‌ಪಿಜಿ ಟ್ಯಾಂಕರ್‌ಗಳು ಆಗಮಿಸುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಆಟೋ ಚಾಲಕರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದರು.