ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮಾಧ್ಯಮಗಳ ಮೂಲಕ ನಾವು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲ ಎಂಬುದನ್ನ ತಿಳಿದುಕೊಳ್ಳಬೇಕಾ? ಅಧಿಕಾರಿಗಳು ಏನ್ ಮಾಡ್ತೀದ್ದೀರಾ? ನಮ್ಮ ಗಮನಕ್ಕೆ ಯಾಕೆ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಆಸ್ಪತ್ರೆಯ ವೈದ್ಯರನ್ನು ತರಾಟೆ ತೆಗೆದುಕೊಂಡರು.ಬೆಂಗಳೂರಿನಿಂದ ಹೊಳೆನರಸಿಪುರಕ್ಕೆ ಹೋಗುವ ಮಾರ್ಗ ಮಧ್ಯೆ ಸರ್ಕಾರಿ ಆಸ್ಪತ್ರೆಗೆ ಹಾಗೂ ಚನ್ನರಾಯಪಟ್ಟಣ ತಾಲೂಕು ಪಂಚಾಯಿತಿಗೆ ದಿಢೀರ್‌ ಭೇಟಿ ನೀಡಿ, ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಔಷಧಿಗಳ ಬಗ್ಗೆ ಪರಿಶೀಲನೆ ನಡೆಸಿ ನಂತರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಿದೆ ಎಂಬುದನ್ನು ನಾವು ಮಾಧ್ಯಮಗಳ ಮೂಲಕ ತಿಳಿದುಕೊಳ್ಳಬೇಕಾ? ಸರ್ಕಾರದ ಗಮನಕ್ಕೆ ಅಧಿಕಾರಿಗಳು ಯಾಕೆ ತರುವುದಿಲ್ಲ? ಇಂದು ತಾಲೂಕು ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರು, ಆಸ್ಪತ್ರೆ ಮತ್ತು ತಾಲೂಕಿನ ಕೆಲವು ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಅಲೆದಾಡಿಸುತ್ತಾರೆ. ಸಣ್ಣಪುಟ್ಟ ಸಮಸ್ಯೆಗೂ ಜಿಲ್ಲೆಯಿಂದ ಡಿಸಿ ಕಚೇರಿಗೆ ಡಿಸಿ ಕಚೇರಿಯಿಂದ ತಾಲೂಕು ಕಚೇರಿಗೆ ಅಲೆಸುತ್ತಾರೆ ಎಂದು ಆರೋಪಿಸಿದ ಸಚಿವರು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ವಚ್ಛತೆಗೆ ಆದ್ಯತೆ ನೀಡದೆ ಖಾಸಗೀ ಆಸ್ಪತ್ರೆ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ರವಾನಿಸುವುದು ಸರಿಯಲ್ಲ. ಈ ಬಗ್ಗೆ ಸಾಕಷ್ಟು ದೂರುಗಳು ನಮ್ಮ ಗಮನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಇದೇ ರೀತಿ ದೂರುಗಳು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ಒಳರೋಗಿಗಳ ವಿಭಾಗದಲ್ಲಿ ಶೌಚಾಲಯ ಸ್ವಚ್ಛವಾಗಿಡಬೇಕು, ರೋಗಿಗಳಿಗೆ ಉತ್ತಮ ಗುಣಮಟ್ಟದ ಆಹಾರ ನೀಡಬೇಕು, ಸರ್ಕಾರ ಸಾಕಷ್ಟು ಹಣ ವ್ಯಯಮಾಡುತ್ತಿದ್ದು, ಅದನ್ನು ಸರಿಯಾಗಿ ಸಾರ್ವಜನಿಕರಿಗೆ ನೀಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು. ಆಸ್ಪತ್ರೆಯಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳಿಲ್ಲ. ಔಷಧಿಯನ್ನು ಹೊರಗೆ ತೆಗೆದುಕೊಳ್ಳಬೇಕು ಎಂದು ವೈದ್ಯರು ಚೀಟಿ ಬರೆದುಕೊಡುತ್ತಾರೆ. ಹೊರಗಿನಿಂದ ನಾವು ಔಷಧಿ ಹಣ ಕೊಟ್ಟು ಪಡೆಯಬೇಕಾದರೆ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು? ಆಸ್ಪತ್ರೆಯಲ್ಲಿ ಸ್ವಚ್ಛತೆಯು ಸರಿಯಾಗಿಲ್ಲ. ವೈದ್ಯರು ಸರಿಯಾದ ಸಮಯಕ್ಕೆ ಬರುವುದಿಲ್ಲ. ಸರ್ಕಾರಿ ಕೆಲಸದಲ್ಲಿದ್ದರು ಖಾಸಗಿ ಆಸ್ಪತ್ರೆಯಲ್ಲಿಯೇ ಹೆಚ್ಚು ಕೆಲಸ ಮಾಡುತ್ತಾರೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳು ಚಿಕಿತ್ಸೆಗಾಗಿ ಪರದಾಡಿ ಕೊನೆಗೆ ಖಾಸಗಿ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣ ಮಾಡುತ್ತಾರೆ ಎಂದು ಸಚಿವರಿಗೆ ಸಾರ್ವಜನಿಕರು ಮನವಿ ಮಾಡುವ ಮೂಲಕ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದರು.ಒಟ್ಟಿನಲ್ಲಿ, ಬೆಂಗಳೂರಿನಿಂದ ಹೊಳೆನರಸೀಪುರಕ್ಕೆ ಹೋಗುವ ಮಾರ್ಗ ಮಧ್ಯೆ ಧಿಡೀರ್ ಭೇಟಿ ನೀಡಿದ ಸಚಿವ ಕೃಷ್ಣ ಬೈರೇಗೌಡ, ತಾಲೂಕಿನ ಸಮಸ್ಯೆಗಳನ್ನು ಆಲಿಸುವ ಮೂಲಕ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳನ್ನ ಖಾಸಗಿ ಆಸ್ಪತ್ರೆಗೆ ಕಳಿಸುವ ಪ್ರಕರಣ ಕಂಡು ಬಂದರೆ ಕಾನೂನಿ ರೀತಿ ಕಠಿಣ ಶಿಕ್ಷೆ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಆದರೆ ಇಂಥ ಪ್ರಕರಣಗಳಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ.ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ, ಸಿಇಒ ಪೂರ್ಣಿಮ, ಶಾಸಕ ಸಿ. ಎನ್. ಬಾಲಕೃಷ್ಣ, ತಹಸೀಲ್ದಾರ್ ಶಂಕರಪ್ಪ, ಇಒ ಹರೀಶ್, ತಾಲೂಕು ಆರೋಗ್ಯಾಧಿಕಾರಿ ಯುವರಾಜ್, ಕಾಂಗ್ರೆಸ್ ಮುಖಂಡ ಮಹೇಶ್‌ ಕಬ್ಬಾಳು, ಜಬೀಉಲ್ಲಾಬೇಗ್ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.