ರಾಗಿಗುಡ್ಡ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ
2 Min read
Author : KannadaprabhaNewsNetwork
Published : Oct 05 2023, 04:15 PM IST
Share this Article
FB
TW
Linkdin
Whatsapp
ಗಜೇಂದ್ರಗಡ ಸಮೀಪದ ಗೋಗೇರಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಸಚಿವ ಪ್ರಿಯಾಂಕ್ ಖರ್ಗೆ ನೀಡಿದರು. | Kannada Prabha
Image Credit: KP
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ರಿಯಾಕ್ಟ್ ಮಾಡಿದ್ದು ಹೀಗೆ...
ಶಿವಮೊಗ್ಗ (ಅ.04): ಗಣಪತಿ ಮತ್ತು ಈದ್ ಮಿಲಾದ್ ಮೆರವಣಿಗೆಗಳು ಎರಡೂ ಶಾಂತಿಯುತವಾಗಿ ನಡೆದಿವೆ. ಆದರೆ, ಕೊನೆ ಸಂದರ್ಭದಲ್ಲಿ ರಾಗಿಗುಡ್ಡದಲ್ಲಿ ಕಹಿ ಘಟನೆ ನಡೆದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ತಪ್ಪಿತಸ್ಥರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಮೆಗ್ಗಾನ್ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ರಾಗಿಗುಡ್ಡ ಗಲಭೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಘಟನೆ ವೇಳೆ ಅನೇಕ ಮನೆಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮನೆಯ ಕಿಟಕಿಗಳ ಗ್ಲಾಸ್ಗಳು ಒಡೆದು ಹೋಗಿದ್ದು, ಹಲವರಿಗೆ ಗಾಯಗಳಾಗಿವೆ ಎಂದರು. ಈ ಬಗ್ಗೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಅವರೆಲ್ಲರಿಗೂ ಸಮಾಧಾನ ಮಾಡಿದ್ದೇನೆ. ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು. ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಹಾಗೂ ಈದ್ಮಿಲಾದ್ ಹಬ್ಬಗಳು ಸಂಭ್ರಮದಿಂದ ನಡೆದಿವೆ. ಆದಾಗ್ಯೂ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಸ್ತುತ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸೆಕ್ಷನ್ 144 ಸಹ ಜಾರಿಗೊಳಿಸಲಾಗಿದೆ. ಈ ಸೆಕ್ಷನ್ ಅನ್ನು ಶೀಘ್ರದಲ್ಲಿ ತೆರವುಗೊಳಿಸಿ ಜನಜೀವನ ಸುಗಮವಾಗಿರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಮತ್ತಿತರರು ಇದ್ದರು. ಚಿತ್ರದುರ್ಗ ಜಿಲ್ಲೆಗೆ ಬಂಧಿತರ ಸ್ಥಳಾಂತರ: ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿವೆ. ಪೊಲೀಸ್ ಇಲಾಖೆ ಎಲ್ಲವನ್ನೂ ಪರಿಶೀಲಿಸಿದೆ. ಘಟನೆಗೆ ಸಂಬಂಧಿಸಿದಂತೆ 60 ಜನರ ಬಂಧಿಸಲಾಗಿದೆ. 24 ಎಫ್ಐಆರ್ ದಾಖಲಿಸಲಾಗಿದೆ. ಸುರಕ್ಷತಾ ದೃಷ್ಠಿಯಿಂದ ಬಂಧಿತರನ್ನು ಚಿತ್ರದುರ್ಗ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಸರ್ಕಾರಿ ಶಾಲೆಗಳ ಗುಣಮಟ್ಟ ವೃದ್ದಿಗೆ ಆದ್ಯತೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದ್ದು, ವಿದ್ಯಾರ್ಥಿಸ್ನೇಹಿ ಶೈಕ್ಷಣಿಕ ವಾತಾವರಣ ನಿರ್ಮಾಣದೊಂದಿಗೆ ಸಮಗ್ರ ವಿಕಾಸದ ಗುರಿ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಿಶ್ವನಾಥಪುರದಲ್ಲಿ ಸೋಮವಾರ ನಡೆದ "ನನ್ನ ಶಾಲೆ ನನ್ನ ಕೊಡುಗೆ " ಯೋಜನೆಯಡಿಯಲ್ಲಿ ಸಿ.ಎಸ್.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಸಿಯೂಟದ ಜೊತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಒಂದು ಕಡೆ ಸ್ಥಳಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಿಂದ ಶಿಕ್ಷಕರ ಹೊರೆ ಕಡಿಮೆ ಮಾಡಬಹುದು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.