ಬಿತ್ತನೆಗೆ ಬೀಜ, ಗೊಬ್ಬರದ ಕೊರತೆ ಇಲ್ಲ- ಡಾ ಚಂದ್ರು ಲಮಾಣಿ

| Published : May 28 2025, 12:36 AM IST

ಬಿತ್ತನೆಗೆ ಬೀಜ, ಗೊಬ್ಬರದ ಕೊರತೆ ಇಲ್ಲ- ಡಾ ಚಂದ್ರು ಲಮಾಣಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿರಹಟ್ಟಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಾದ್ಯಂತ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಪ್ರಾರಂಭವಾಗಿದ್ದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಬಿತ್ತನೆಗೆ ಬೀಜ, ಗೊಬ್ಬರದ ಕೊರತೆ ಇಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಮುಂಡರಗಿ: ಶಿರಹಟ್ಟಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕಿನಾದ್ಯಂತ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಪ್ರಾರಂಭವಾಗಿದ್ದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಬಿತ್ತನೆಗೆ ಬೀಜ, ಗೊಬ್ಬರದ ಕೊರತೆ ಇಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಮಂಗಳವಾರ ಪಟ್ಟಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ 2025 26ನೇ ಸಾಲಿನ ಮುಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಬೀಜ ವಿತರಿಸಿ ಮಾತನಾಡಿದರು. ಕಳೆದ ಒಂದು ವಾರದಿಂದ ಉತ್ತಮವಾಗಿ ಮಳೆಯಾಗುತ್ತಿದ್ದು, ಈಗಾಗಲೇ ರೈತರು ಬಿತ್ತನೆಗೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದು, ಮಳೆ ಕಡಿಮೆಯಾದ ತಕ್ಷಣವೇ ಬಿತ್ತನೆ ಕಾರ್ಯ ಕೈಗೊಳ್ಳಲಿದ್ದಾರೆ. ಕಳೆದೆರಡು ವರ್ಷಗಳ ಹಿಂದೆ ಮಳೆಯಾಗದೆ ಬರಗಾಲ ಬಿದ್ದಿತ್ತು. ಪ್ರಸ್ತುತ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಉತ್ತಮವಾಗಿ ಆಗುವ ಕುರಿತು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಡಿಎಪಿ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ನಮ್ಮಲ್ಲಿ ಮಿಶ್ರ ಡಿಎಪಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗಿದೆ. ರೈತರು ಅದನ್ನು ಬಳಕೆ ಮಾಡಿಕೊಳ್ಳಬೇಕು. ಕೃಷಿ ಇಲಾಖೆಯಲ್ಲಿ ತಾಲೂಕಿನ ರೈತರಿಗೆ ಬೇಕಾಗುವಷ್ಟು ಬೀಜ, ಗೊಬ್ಬರ ದಾಸ್ತಾನು ಇದೆ ಎಂದು ಕೃಷಿ ಇಲಾಖೆ ಅಧಿಕಾರಿ ಹೇಳುತ್ತಿದ್ದು, ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕಿನ 8 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಟಿಎಪಿಸಿಎಂಎಸ್ ಅಂಗಡಿಗಳಲ್ಲಿ ರಸಗೊಬ್ಬರ ಖಾಸಗಿ ವ್ಯಕ್ತಿಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಮಾರಾಟವಾಗುತ್ತಿದೆ ಎಂದು ರೈತರಿಂದ ದೂರುಗಳು ಕೇಳಿ ಬರುತ್ತಿದ್ದು, ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ, ಒಂದು ವೇಳೆ ಖಾಸಗಿ ವ್ಯಕ್ತಿಗಳಿಗೆ ವಿತರಿಸುತ್ತಿರುವುದು ಕಂಡುಬಂದಲ್ಲಿ ಆ ಅಂಗಡಿಗಳ ಪರವಾನಗಿ ರದ್ದು ಪಡಿಸಬೇಕೆಂದು ಸೂಚಿಸಿದರು. ಮುಂಡರಗಿ ಬಿಜೆಪಿ ಮಂಡಲದ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಮಾತನಾಡಿ, ರೈತರು ಕಾಲಕ್ಕೆ ತಕ್ಕಂತೆ ಬದಲಾವಣೆ ಯಾಗಬೇಕು. ಆಗದಿದ್ದರೆ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಅನುಭವಿಸಬೇಕಾಗುತ್ತದೆ. ಬೆಳೆಗಳಿಗೆ ರೋಗ ಬಂದ ನಂತರ ಹಾನಿ ಅನುಭವಿಸುವುದಕ್ಕಿಂತ ಮೊದಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ರೋಗ ಬರದಂತೆ ಕ್ರಮ ವಹಿಸಬೇಕು. ಗೊಬ್ಬರ ಬಳಸುವಾಗಲು ಸಹ ಆಯಾ ಮಣ್ಣಿನ ಗುಣ ಧರ್ಮವನ್ನು ಪರೀಕ್ಷಿಸಿ, ಸಂಬಂಧಪಟ್ಟ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಳಕೆ ಮಾಡಬೇಕು. ಕೃಷಿ ಇಲಾಖೆ ಆಗಾಗಿ ರೈತರಿಗೂ ಸಹ ತರಬೇತಿ ನೀಡುವ ಮೂಲಕ ರೈತರಿಗೆ ಕೃಷಿಯಲ್ಲಿನ ಹೊಸ ಆವಿಷ್ಕಾರಗಳನ್ನು ಪರಿಚಯಿಸಬೇಕು ಎಂದರು. ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಾಣೇಶ್ ಮಾತನಾಡಿ, ಪ್ರಸ್ತುತ ವರ್ಷ ತಾಲೂಕಿನಲ್ಲಿ 51,370 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದೆ. ಈಗಾಗಲೇ ಮುಂಡರಗಿ ಮತ್ತು ಡಂಬಳ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಮುಂಗಾರು ಹಂಗಾಮಿಗೆ ಬೇಕಾದ ಗೋವಿನ ಜೋಳ, ಹೆಸರು ಸೇರಿದಂತೆ ಎಲ್ಲ ಬೀಜಗಳು ಸ್ಟಾಕ್ ಇವೆ. ಅಲ್ಲದೆ ಗೊಬ್ಬರವು ಸಹ ಸರಬರಾಜು ಆಗಿದ್ದು, ರೈತರು ಸಮಾಧಾನದಿಂದ ರೈತ ಸಂಪರ್ಕ ಕೇಂದ್ರಕ್ಕೆ ಬಂದು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಶಿವಪ್ಪ ನವಲಗುಂದ, ಹನುಮರೆಡ್ಡಿ ಮಾದನೂರು, ಮೈಲಾರಪ್ಪ ಕಲಕೇರಿ, ಈಶ್ವರಪ್ಪ ಮಲ್ಲಶೆಟ್ಟರ್, ಅರುಣಾ ಪಾಟೀಲ, ಬಸವರಾಜ ಚಿಗಣ್ಣವರ, ಅಂಬವ್ವ ಕಟ್ಟಿಮನಿ, ಜ್ಯೋತಿ ಹಾನಗಲ್ಲ, ಶಿವನಗೌಡ ಗೌಡರ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಗುಡದಪ್ಪ ಲಿಂಗಶೆಟ್ಟರ್ ನಿರೂಪಿಸಿ, ವಂದಿಸಿದರು.