ಮಂಗಳೂರು ನಗರದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಇತ್ತೀಚೆಗೆ ನಡೆಯಿತು.
ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಮಂಗಳೂರು: ಎಚ್.ಐ.ವಿ. ಸೋಂಕಿತರು/ ಭಾದಿತರ ಬಗ್ಗೆ ಯಾವುದೇ ತಾರತಾಮ್ಯ, ಕಳಂಕ ಬೇಡ. ಅವರಿಗೂ ಸಮಾಜದಲ್ಲಿ ಎಲ್ಲರೊಂದಿಗೆ ಬಾಳಿ ಬದುಕುವ ಅವಕಾಶ ನೀಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಹೇಳಿದ್ದಾರೆ.
ನಗರದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಒಮ್ಮೆ ಎಚ್.ಐ.ವಿ ಸೋಂಕಿಗೆ ಒಳಗಾದರೆ ಸಮಾಜ ತಾರತಮ್ಯ ಮಾಡುವುದರಿಂದ ಸೋಂಕು ಪೀಡಿತರು ಬದುಕುವ ಹಕ್ಕನ್ನು ಕಳೆದುಕೊಳ್ಳುವಂತಾಗುತ್ತದೆ. ಎಚ್.ಐ.ವಿ ನಿಯಂತ್ರಣ ಮತ್ತು ತಡೆ ಕಾಯ್ದೆ 2017ರ ಪ್ರಕಾರ ಸೋಂಕಿತರಾಗಿರುವ ವ್ಯಕ್ತಿಗಳಿಗೆ ಮಾನವೀಯ ಮತ್ತು ಸಂವಿಧಾನಿಕ ಹಕ್ಕುಗಳ ರಕ್ಷಣೆಯನ್ನು ಒದಗಿಸುತ್ತದೆ ಎಂದರು.ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಮಾತನಾಡಿ, ಹದಿಹರೆಯದಲ್ಲಿ ಮನಸ್ಸಿನ ತಲ್ಲಣ, ಕಾತರಗಳು, ಗೊಂದಲಗಳಿಂದಾಗಿ ಎಡವುದುಂಟು. ಈ ಸಮಯದಲ್ಲಿ ಸೂಕ್ತ ರೀತಿಯ ಮಾರ್ಗದರ್ಶನವು ಸದೃಢ ಆರೋಗ್ಯಕರ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.ಸುರತ್ಕಲ್ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ಎಂ. ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳುವ ಮೌಲ್ಯ ಜೀವನದುದ್ದಕ್ಕೂ ಸಹಕಾರಿಯಾಗುತ್ತದೆ. ಜೀವನದಲ್ಲಿ ನಿಗದಿತ ಗುರಿ ತಲುಪಿ ಯಶಸ್ಸನ್ನು ಸಾಧಿಸಲು ಉನ್ನತ ಧ್ಯೇಯ, ಮೌಲ್ಯ ಮತ್ತು ಶಿಸ್ತು ಅತಿ ಮುಖ್ಯ ಎಂದು ಹೇಳಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿ ಸಿ.ಎ. ಶಾಂತಾರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ವಿಶ್ವ ಏಡ್ಸ್ ದಿನ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಖತೀಜಾ ದಿಲ್ಷದ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ. ಕೆ ಉಳೆಪಾಡಿ ನಿರೂಪಿಸಿದರು. ತಾರಾನಾಥ ವಂದಿಸಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಯೆನಪೋಯ ನರ್ಸಿಂಗ್ ಕಾಲೇಜು, ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ ದ.ಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.