ಸಾರಾಂಶ
ಮೂವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯಲ್ಲಿ ಯಾರೂ ಇಲ್ಲವೆಂದು ಖಾತ್ರಿ ಪಡಿಸಿಕೊಂಡ ಬಳಿಕ ವಾಪಸ್ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಚನ್ನಪಟ್ಟಣ: ಬೈಕ್ ನಲ್ಲಿ ಬಂದ ಇಬ್ಬರು ಆಗಂತುಕರು ದೇವಸ್ಥಾನದಿಂದ ಮನೆಗೆ ವಾಪಸ್ ಹೋಗುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ನಗರದ ಕೋಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ನಗರದ ಮಂಟೇಸ್ವಾಮಿ ಮಠದ ಬೀದಿಯ ನಿವಾಸಿ ಇಂದಿರಾ ಎಂಬುವವರ ೭೦ ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ತಮ್ಮ ಸ್ನೇಹಿತೆಯರೊಡನೆ ಕೋಟೆಯ ವರದರಾಜ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಾಪಸ್ ಮನೆಗೆ ಮರಳುವಾಗ ಈ ಘಟನೆ ಸಂಭವಿಸಿದೆ. ಮೂವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯಲ್ಲಿ ಯಾರೂ ಇಲ್ಲವೆಂದು ಖಾತ್ರಿ ಪಡಿಸಿಕೊಂಡ ಬಳಿಕ ವಾಪಸ್ ಬಂದು ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಎಲ್ಲಾ ಘಟನೆ ಎದುರು ಮನೆಯ ಸಿಸಿಟಿವಿಯಲ್ಲಿ ಸಂಪೂರ್ಣ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪುರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.