ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಹೀಗಾಗಿ, ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎಂದರು.
ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅ.3 ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟಿಸಲಾಗುವುದು ಎಂದು ಅವರು ಹೇಳಿದರು.ಈ ಬಾರಿ ದಸರಾ ಆಚರಣೆಗೆ 40 ಕೋಟಿವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಹೀಗಾಗಿ, ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.
ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದು ಅವರು ತಿಳಿಸಿದರು.ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಕುರಿತ ಸ್ತಬ್ಧಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೇರಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಸೆಸ್ಕ್ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು. ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು.ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಕೆ. ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗ ಶೆಟ್ಟಿ, ಟಿ.ಎಸ್. ಶ್ರೀವತ್ಸ, ಡಿ. ರವಿಶಂಕರ್, ಎಚ್.ಎಂ. ಗಣೇಶ್ ಪ್ರಸಾದ್, ಎ.ಆರ್. ಕೃಷ್ಣಮೂರ್ತಿ, ಎಚ್. ವಿಶ್ವನಾಥ್, ಡಾ.ಡಿ. ತಿಮ್ಮಯ್ಯ, ಕೆ. ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಎಸ್ಪಿ ಎನ್. ವಿಷ್ಣುವರ್ಧನ್ ಮೊದಲಾದವರು ಇದ್ದರು.ಅರ್ಜುನ ಆನೆ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಿ
ದಸರೆಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ವೀರ ಮರಣ ಹೊಂದಿದ್ದು, ಅದರ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಬೇಕು ಎಂದು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ನಿಗಮದ ಅಧ್ಯಕ್ಷರಾದ ಶಾಸಕ ಅನಿಲ್ ಚಿಕ್ಕಮಾದು ಮನವಿ ಮಾಡಿದರು.ದಸರಾ ಆಚರಣೆಗೆ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆ.21 ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50 ಅನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು.
- ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾಧಿಕಾರಿವಾರ್ತಾ ಇಲಾಖೆಯ 20 ಬೋರ್ಡ್ ಗಳನ್ನು ಡಿಜಿಟಲೀಕರಣ ಮಾಡಿ ಅಲ್ಲಿ ದಸರಾ ಪ್ರಚಾರವನ್ನು ಮಾಡಬೇಕು. ಆಹಾರ ಮೇಳ ಕನಿಷ್ಠ 1 ತಿಂಗಳು ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರವನ್ನು ಕಡಿಮೆ ದರದಲ್ಲಿ ನೀಡಬೇಕು.- ತನ್ವೀರ್ ಸೇಠ್, ಶಾಸಕರು