ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ 2023 ರಿಂದ ಜುಲೈ 2026 ರವರೆಗೆ 3 ವರ್ಷಗಳ ಉಚಿತ ವಿದ್ಯುತ್ ಸರಬರಾಜಿನ ವೆಚ್ಚ ₹641.45 ಕೋಟಿಗಳನ್ನು ಸರ್ಕಾರವೇ ಭರಿಸಿದೆ.

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಗೃಹಜ್ಯೋತಿ ಗ್ಯಾರಂಟಿಯ ಯೋಜನೆಯ ಪರಿಶೀಲನೆಯ ಕಾರ್ಯದಲ್ಲಿ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ಎಚ್ಚರವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ನಿರ್ದೇಶನ ನೀಡಿದರು.

ಹಳಿಯಾಳ ತಾಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೃಹಜ್ಯೋತಿ ಯೋಜನೆಯಡಿ ಆಗಸ್ಟ್ 2023 ರಿಂದ ಜುಲೈ 2026 ರವರೆಗೆ 3 ವರ್ಷಗಳ ಉಚಿತ ವಿದ್ಯುತ್ ಸರಬರಾಜಿನ ವೆಚ್ಚ ₹641.45 ಕೋಟಿಗಳನ್ನು ಸರ್ಕಾರವೇ ಭರಿಸಿದೆ. ಪ್ರಸ್ತುತ ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಸಮಯದಲ್ಲಿ ಅರ್ಹ ಫಲಾನುವಿಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯವು ತಲುಪುತ್ತಿರುವ ಬಗ್ಗೆ ಪರಿಶೀಲಿಸಿ, ಅರ್ಹರು ಯೋಜನೆಯಿಂದ ವಂಚಿತರಾಗದಂತೆ ಎಚ್ಚರವಹಿಸುವುದರ ಜೊತೆಗೆ ಸಾರ್ವಜನಿಕರಿಂದ ದಾಖಲೆ ಸಂಗ್ರಹಿಸುವ ಸಮಯದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಶಕ್ತಿ ಯೋಜನೆಗೆ ಸಂಬಂಧಿಸಿದಂತೆ, ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಮತ್ತು ಶೌಚಾಲಯಗಳ ನಿರ್ವಹಣೆ ಕುರಿತಂತೆ ಸಂಬಂಧಪಟ್ಟ ಟೆಂಡರ್‌ದಾರರಿಗೆ ಸೂಚನೆಗಳನ್ನು ನೀಡುವಂತೆ ತಿಳಿಸಿ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಸರ್ವರ್ ಸಮಸ್ಯೆಯ ಕುರಿತಂತೆ ಅಧಿಕಾರಿಗಳು ಶೀಘ್ರದಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಯುವನಿಧಿ ಯೋಜನೆಗೆ ಸಂಬಂಧಿಸಿದ ಅಂಕಿ-ಅಂಶಗಳನ್ನು ಪರಿಶೀಲಿಸಿ, ಅರ್ಹ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ಕುರಿತು ಸೂಚನೆ ನೀಡಿದರು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮೃತಪಟ್ಟ ಫಲಾನುಭವಿಗಳ ಮಾಹಿತಿಯನ್ನು ಸರಿಪಡಿಸಿ, ಬಿಟ್ಟು ಹೋದ ಅರ್ಹ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸುವಂತೆ ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಅಲ್ಲಭಕ್ಷ್, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೂಕ್ತ ರೀತಿಯಲ್ಲಿ, ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ್ ಮುರ್ಡೇಶ್ವರ, ಪುರುಷೋತ್ತಮ ನಾಯಕ್, ಜನಾರ್ದನ್ ದೇವಾಡಿಗ, ಹಳಿಯಾಳ ತಾಪಂ ಇಒ ವಿಲಾಸರಾಜ್ ಪ್ರಸನ್ನ ಇದ್ದರು.