ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು.
ಬಳ್ಳಾರಿ: ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಮೂಲಕ ವಾಹನ ಚಾಲನೆ ಮಾಡುವವರೇ ನಿಜವಾದ ಹೀರೋಗಳಾಗುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಜಿ ಶಾಂತಿ ಹೇಳಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಸಾರಿಗೆ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಿನನಿತ್ಯ ಬಳಸುವ ರಸ್ತೆಯಲ್ಲಿ ಪ್ರತಿಯೊಬ್ಬರ ಜೀವನ ಅಡಗಿದ್ದು, ಜಾಗರೂಕರಾಗಿ ವಾಹನ ಚಲಾಯಿಸಬೇಕು. ರಸ್ತೆ ನಿಯಮ ಉಲ್ಲಂಘಿಸಿ, ಸಿಗ್ನಲ್ ಜಂಪ್ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಚಲಾಯಿಸುವುದು ಸಾಹಸವಲ್ಲ; ಬದಲಾಗಿ ನಿಯಮ ಪಾಲಿಸಿ ವಾಹನ ಚಲಾಯಿಸಿದರೆ ಮಾತ್ರ ಸುರಕ್ಷಿತರಾಗಿ ಮನೆಗೆ ಸೇರಬಹುದು ಎಂದರು.18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸಲು ನೀಡಿದಲ್ಲಿ ಮಕ್ಕಳ ಪೋಷಕರ ವಿರುದ್ಧ ಪ್ರಕರಣ ಮತ್ತು 25 ಸಾವಿರ ದಂಡವಿದೆ. ಚಾಲನಾ ಪರವಾನಿಗೆ ಇಲ್ಲದೇ ವಾಹನ ಚಲಾಯಿಸುವಂತಿಲ್ಲ. ಈ ಕುರಿತು ಪ್ರತಿಯೊಬ್ಬರೂ ಎಚ್ಚರವಹಿಸಬೇಕು. 5 ಬಾರಿಗಿಂತ ಪ್ರಕರಣ ದಾಖಲಾದಲ್ಲಿ ಅಂತಹವರ ಚಾಲನಾ ಪರವಾನಿಗೆ ಶ್ವಾಶತವಾಗಿ ರದ್ದುಪಡಿಸುವ ಕಾನೂನಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಸುರಕ್ಷತೆಯು ಮೊದಲ ಆದ್ಯತೆಯಾಗಬೇಕು. ಅದು ರಸ್ತೆ ಸುರಕ್ಷತೆಯಾಗಿರಬೇಕು. ಬದಲಾವಣೆ ನಮ್ಮಿಂದ ಮಾತ್ರ ಸಾಧ್ಯವಾಗಿದ್ದು, ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದರು.ಎಸ್ಪಿ ಡಾ.ಸುಮಾ ಡಿ.ಪೆನ್ನೇಕರ್ ಮಾತನಾಡಿ, ರಸ್ತೆ ಪಾದಚಾರಿಗಳು ಸಹ ಜಾಗ್ರತೆಯಿಂದ ರಸ್ತೆ ಸಂಚಾರ ನಿಮಯಗಳನ್ನು ಪಾಲಿಸಬೇಕಿದೆ. ಅವಘಡ ಯಾವ ರೀತಿಯಲ್ಲಾದರೂ ಸಂಭವಿಸಬಹುದಾಗಿದೆ. ರಸ್ತೆ ನಿಮಯ, ಸಂಚಾರಿ ಚಿಹ್ನೆಗಳನ್ನು ಅರಿತುಕೊಳ್ಳುವುದು ಅತ್ಯಗತ್ಯವಾಗಿದೆ. ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೆಲ್ಟ್ ಕಟ್ಟಿಕೊಳ್ಳಬೇಕು. ಚಾಲನೆ ವೇಳೆ ಮೊಬೈಲ್ ಫೋನ್ ಬಳಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮುಖ್ಯ ರಸ್ತೆ ಸಂಚಾರ ನಿಯಮಗಳನ್ನು ಕೈ ಸನ್ನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಕುರಿತಾದ ಭಿತ್ತಿಪತ್ರ ಅನಾವರಣಗೊಳಿಸಿದರು. ರಸ್ತೆ ಸುರಕ್ಷತೆ ಜಾಗೃತಿಯ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮ, ಪ್ರಭಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು, ಸಂಚಾರಿ ಪೊಲೀಸ್ ಅಧಿಕಾರಿಗಳು ಹಾಗೂ ಆಟೋ, ಲಾರಿ ಸಂಘದ ಪದಾಧಿಕಾರಿಗಳು, ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.