ಜಿಲ್ಲೆ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಶನಿವಾರ ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲಿದ್ದಾರೆ.

ಕಾರವಾರ: ಜಿಲ್ಲೆ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಶನಿವಾರ ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲಿದ್ದಾರೆ.

30ಕ್ಕೂ ಹೆಚ್ಚು ಬಸ್ಸುಗಳು, ಟೆಂಪೋಗಳು, ನೂರಾರು ಕಾರು, ಖಾಸಗಿ ವಾಹನಗಳಲ್ಲಿ ಜನರು ಯಡಿಯೂರಪ್ಪ ಅಭಿಮಾನೋತ್ಸವವನ್ನು ಕಣ್ತುಂಬಿಕೊಳ್ಳಲು, ಹುಟ್ಟು ಹೋರಾಟಗಾರ, ಛಲದಂಕ ಮಲ್ಲ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಉತ್ಸಾಹದಿಂದ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ತೆರಳಲಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಬಿಜೆಪಿಯ ಎಲ್ಲ ಮಂಡಲಗಳಿಗೆ ಭೇಟಿ ನೀಡಿ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲು ಜನತೆಗೆ ಅನುಕೂಲವಾಗುವಂತೆ ವಾಹನಗಳ ವ್ಯವಸ್ಥೆಯನ್ನೂ ಕಲ್ಪಿಸಿದ್ದಾರೆ.

ರೂಪಾಲಿ ಎಸ್.ನಾಯ್ಕ ನಡೆಸಿದ ಸಭೆಗಳಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸಾಧನೆ, ಪಕ್ಷ ಸಂಘಟನೆಗಾಗಿ ನಡೆಸಿದ ಅವಿರತ ಹೋರಾಟ, ಮುಖ್ಯಮಂತ್ರಿಯಾಗಿ ಘೋಷಿಸಿದ ಜನಪ್ರಿಯ ಯೋಜನೆಗಳು, ಜಿಲ್ಲೆಯ ಜನತೆಗೆ ಯಡಿಯೂರಪ್ಪ ಅವರ ಕೊಡುಗೆಗಳ ಬಗ್ಗೆ ವಿವರಿಸಿ, ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರದ ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವದಲ್ಲಿ ಜಿಲ್ಲೆಯಿಂದ ಸಾವಿರ ಸಾವಿರ ಸಂಖ್ಯೆಯಲ್ಲಿ ಜನತೆ ಭಾಗವಹಿಸುತ್ತಿರುವುದು ವಿಶೇಷವಾಗಿದೆ. ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದ ಶ್ರೇಯಸ್ಸು ರೈತ ನಾಯಕ, ಹುಟ್ಟು ಹೋರಾಟಗಾರ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಮಹಿಳೆಯರು, ರೈತರು, ದೀನ ದಲಿತರು, ಹಿಂದುಳಿದವರು ಹೀಗೆ ಎಲ್ಲ ವರ್ಗದವರಿಗೆ ನ್ಯಾಯ ದೊರಕಿಸಿಕೊಟ್ಟ ಧೀಮಂತ ನಾಯಕ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನಸೇವೆ ಹಿನ್ನೆಲೆಯಲ್ಲಿ ಅಭಿಮಾನೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ. ಅಭಿಮಾನೋತ್ಸವದಲ್ಲಿ ಕಾರವಾರ ಅಂಕೋಲಾ ಕ್ಷೇತ್ರ ಹಾಗೂ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನತೆ ಭಾಗವಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದ್ದಾರೆ.