ಸಾರಾಂಶ
ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿಯೊಬ್ಬರು ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಹಾಗೂ ಬೆಟ್ಟದಳ್ಳಿ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶುಶ್ರೂಷಣಾಧಿಕಾರಿಯೊಬ್ಬರು ಶ್ರೀಕುಮಾರಲಿಂಗೇಶ್ವರ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಹಾಗೂ ಬೆಟ್ಟದಳ್ಳಿ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಬೆಟ್ಟದಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಸಂಪತ್, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದು, ಶುಶ್ರೂಷಣಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಲಾಯಿತು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಅರೋಗ್ಯಾಧಿಕಾರಿ, ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಶುಶ್ರೂಷಣಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ವಿದ್ಯಾಸಂಸ್ಥೆಯವರು ದೂರು ನೀಡಿದ ಹಿನ್ನೆಲೆಯಲ್ಲಿ ತನಿಖಾ ತಂಡವನ್ನು ರಚನೆ ಮಾಡಲಾಗಿತ್ತು. ಕಳೆದ ಏಳು ವರ್ಷಗಳಿಂದ ಶುಶ್ರೂಷಣಾಧಿಕಾರಿ ಅವರು ಯಾವುದೇ ಲೋಪಗಳಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ವರದಿಯನ್ನು ತನಿಖಾ ತಂಡ ನೀಡಿದೆ. ಶಾಲಾ ಜಾಗದ ವಿಷಯದಲ್ಲಿ ಈ ಪ್ರಕರಣ ನಡೆಯುತ್ತಿದೆ ಎಂಬ ಮಾಹಿತಿಯೂ ಮೇಲಾಧಿಕಾರಿಗಳಿಗೆ ರವಾನೆಯಾಗಿದೆ. ಏಕಾಏಕಿ ಶುಶ್ರೂಷಣಾಧಿಕಾರಿ ವಿರುದ್ಧ ಇಲಾಖಾ ಕ್ರಮಕೈಗೊಳ್ಳಲು ಸಾಧ್ಯವಿಲ್ಲ. ದೂರಿನ ಬಗ್ಗೆ ಮೇಲಾಧಿಕಾರಿಗಳಿಗೂ ತಿಳಿಸಲಾಗಿದೆ. ಅಲ್ಲಿಂದ ಆದೇಶ ಬಂದ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದು ಡಿಎಚ್ಒ ಸತೀಶ್ ಕುಮಾರ್ ಹೇಳಿದರು.
ಅಧಿಕಾರಿಯ ಸಮಜಾಯಿಷಿಕೆಯಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಗ್ರಾಮದ ಜನರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಲು ಹಿಂಜರಿಯುತ್ತಿದ್ದಾರೆ. ಶುಶ್ರೂಷಣಾಧಿಕಾರಿಯನ್ನು ವರ್ಗಾವಣೆ ಮಾಡದಿದ್ದರೆ, ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾಕಾರರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ವರ್ಗಾವಣೆಗೊಳಿಸಲಾಗುವುದು ಎಂದು ಡಿಎಚ್ಒ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಡಾ.ಮಂತರ್ಗೌಡ, ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು. ಸೂಕ್ತ ತನಿಖೆ ನಡೆಸಿ ಒಂದು ವಾರದ ಒಳಗೆ ಮಾಹಿತಿ ನೀಡುವಂತೆ ಡಿಎಚ್ಒ ಅವರಿಗೆ ಸೂಚಿಸಿದರು. ತಹಸೀಲ್ದಾರ್ ಕೃಷ್ಣಮೂರ್ತಿ, ಟಿಎಚ್ಒ ಡಾ.ಇಂದೂಧರ್ ಇದ್ದರು. ಪ್ರತಿಭಟನೆಯಲ್ಲಿ ಬೆಟ್ಟದಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿದ್ದರು.