ಸಾರಾಂಶ
ಚಿತ್ರದುರ್ಗ: ವಿವಿಧ ಕಾರಣಗಳಿಂದ ದೂರವಾಗಿದ್ದ ಮೂವರು ದಂಪತಿಗಳು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಒಂದಾದರು.
ಚಿತ್ರದುರ್ಗ: ವಿವಿಧ ಕಾರಣಗಳಿಂದ ದೂರವಾಗಿದ್ದ ಮೂವರು ದಂಪತಿಗಳು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಒಂದಾದರು.
ವೈವಾಹಿಕ ಜೀವನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯದಲ್ಲಿ ಒಂದು ಪ್ರಕರಣ ಮತ್ತು ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿನ ಎರಡು ಪ್ರಕರಣದ ಮಾಹಿತಿ ಪಡೆದ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ರವರು ಆ ಜೋಡಿಗಳೊಂದಿಗೆ ಮಾತನಾಡಿ, ಯಾವ ಕಾರಣಕ್ಕೆ ದೂರವಿದ್ದೀರಾ, ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಿ, ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಎಂದು ಮನವರಿಕೆ ಮಾಡಿಕೊಡುವ ಮೂಲಕ ಅವರ ವೈವಾಹಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸುಖಾಂತ್ಯಗೊಳಿಸಿದರು.ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ರವರ ಸಮ್ಮುಖದಲ್ಲಿ ಸೊಂಡೆಕೊಳ ಗ್ರಾಮದ ಕರುಣಾಸಾಗರ್ ಹಾಗೂ ಲತಾ ದಂಪತಿ, ಹಿರಿಯೂರು ನಗರದ ಮಹಾಲಿಂಗರಾಜು ಹಾಗೂ ಪ್ರತಿಭಾ ದಂಪತಿ, ಚಿಕ್ಕಂದವಾಡಿ ಗ್ರಾಮದ ಸ್ವಾಮಿ ಹಾಗೂ ಪ್ರತಿಭಾ ಅವರು ಮುನಿಸು ಮರೆತು ಪರಸ್ಪರ ಹೂ ಮಾಲೆ ಬದಲಿಸಿಕೊಂಡು ಸಿಹಿ ತಿನ್ನಿಸುವ ಮೂಲಕ ಮತ್ತೆ ಜತೆಯಾಗಿ ಬದುಕು ಕಟ್ಟಿಕೊಳ್ಳುವ ಸಂಕಲ್ಪ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತ, ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಸೇರಿದಂತೆ ವಕೀಲರು ಹಾಗೂ ಸಾರ್ವಜನಿಕರು ಹಾಜರಿದ್ದರು.