ಶ್ರೀನಿವಾಸ್‌ಮೂರ್ತಿ ಅಧ್ಯಕ್ಷತೆಯಲ್ಲಿ ಅಭಿನಂದನಾ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಚಳ್ಳಕೆರೆ

ಶಿಕ್ಷಣ ಇಲಾಖೆ ಇತ್ತೀಚೆಗೆ ಪುಷ್ಠಿ ಕಾರ್ಯಕ್ರಮ ಯೋಜನೆಯಡಿ ತಾಲೂಕಿನಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಪ್ರಶಸ್ತಿಗೆ ಆಯ್ಕೆಮಾಡಿದ್ದು, ತಾಲೂಕಿನ ತಳಕು ಹೋಬಳಿಯ ತಿಪ್ಪಾರೆಡ್ಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಸಮಿತಿ, ನಗರದ ಉರ್ದು ಶಾಲೆ ಹಾಗೂ ಜಡೇಕುಂಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಈ ಪ್ರಶಸ್ತಿಯನ್ನು ಪಡೆದುಕೊಂಡಿವೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆಯಂತೆ ಕಳೆದ ಹಲವಾರು ದಶಗಳಿಂದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ನೇಮಕ ಮಾಡಿ ಶಾಲೆಯ ಅಭಿವೃದ್ಧಿ ಹಾಗೂ ಕಾರ್ಯಚಟುವಟಿಕೆಗಳ ಕುರಿತು ಎಸ್‌ಡಿಎಂಸಿ ಸಮಿತಿ ಕೈಗೊಂಡ ನಿರ್ಣಯಕ್ಕೆ ಶಿಕ್ಷಣ ಇಲಾಖೆ ಅನುಮೋದಿಸುತ್ತಿತ್ತು. ಎಸ್‌ಡಿಎಂಸಿ ಸಮಿತಿಗೆ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಸ್ತುತ ವರ್ಷದಿಂದ ಪುಷ್ಠಿ ಕಾರ್ಯಕ್ರಮದಡಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು ಮೊಟ್ಟ ಮೊದಲ ಬಾರಿಗೆ ತಿಪ್ಪಾರೆಡ್ಡಿ ಸರ್ಕಾರಿ ಪ್ರೌಢಶಾಲೆ ನಗರದ ಉರ್ದು ಶಾಲೆ ಹಾಗೂ ಜಡೇಕುಂಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಸಮಿತಿಗೆ ಈ ಪ್ರಶಸ್ತಿ ಲಭಿಸಿದೆ.

ತಿಪ್ಪಾರೆಡ್ಡಿಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮುಖ್ಯಶಿಕ್ಷಕ ಶ್ರೀನಿವಾಸ್‌ಮೂರ್ತಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್‌ಡಿಎಂಸಿ ಸಮಿತಿಯೂ ಸಹ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ನಮ್ಮ ಶಾಲೆಯಲ್ಲೂ ಅನೇಕ ಸಂದರ್ಭದಲ್ಲಿ ಎಸ್‌ಡಿಎಂಸಿ ಕಾರ್ಯಕಾರಿ ಸಮಿತಿ ನಮ್ಮೊಂದಿಗೆ ಶ್ರಮಿಸಿದೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡುತ್ತಿದ್ದು, ಪ್ರಶಸ್ತಿ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ಇದಕ್ಕೆ ಕಾರಣಕರ್ತರಾದ ಎಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.