ಮಾಗಡಿ: ಬಿರಿಯಾನಿ ಸವಿಯಲು ಬುಲೆಟ್ನಲ್ಲಿ ಹೊರಟಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಭೀಕರ ಘಟನೆ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರು ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಮನೋಜ್ (21) ದಾವಣಗೆರೆ, ಅಭಿಲಾಷ್ (21) ಬೇಲೂರು ಹಾಗೂ ನವೀನ್ (21) ರಾಯಚೂರು ಮೂಲದವರು. ಆಚಾರ್ಯ ಕಾಲೇಜಿನ ವಿದ್ಯಾರ್ಥಿ.ಬೆಂಗಳೂರಿನಲ್ಲಿ ನೆಲೆಸಿದ್ದ ಈ ಮೂವರು ವಿದ್ಯಾರ್ಥಿಗಳು ಶನಿವಾರ ಮುಂಜಾನೆ 4 ಗಂಟೆಗೆ ಕುಣಿಗಲ್ನಲ್ಲಿ ಬಿರಿಯಾನಿ ತಿನ್ನಲು ಬುಲೆಟ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆನೆಕಲ್ಗೆ ರಾಗಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮನೋಜ್ ಮತ್ತು ಅಭಿಲಾಷ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರವಾಗಿ ಗಾಯಗೊಂಡಿದ್ದ ನವೀನ್ನನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಎಎಸ್ಪಿ ರಾಮಚಂದ್ರಯ್ಯ ಭೇಟಿ ನೀಡಿ ಪರಿಶೀಲಿಸಿದ್ದು, ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.