ಅರಸೀಕೆರೆ: ತಾಲೂಕಿನ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣಗೌರಮ್ಮ ದೇವಿ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು, ಹಗಲು-ರಾತ್ರಿ ಎನ್ನದೇ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಗುರುವಾರ ತಡರಾತ್ರಿ 1 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.ಹಾರನಹಳ್ಳಿ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರು ಸಂಜೆ ದೇವಸ್ಥಾನಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿ, ದೂರದ ಊರುಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ದರ್ಶನ ಹಾಗೂ ದಾಸೋಹದ ವ್ಯವಸ್ಥೆ ಕಲ್ಪಿಸುವಂತೆ ದೇವಾಲಯದ ಆಡಳಿತ ಮಂಡಳಿಗೆ ಸೂಚಿಸಿದರು. ಕೋಡಿಮಠದ ಮಹಾತಪಸ್ವಿ ಶಿವಲಿಂಗ ಸ್ವಾಮೀಜಿಯವರು ಒಂದು ಕೋಟಿ ಜಪ ನೆರವೇರಿಸಿ ಸ್ವರ್ಣಗೌರಮ್ಮ ದೇವಿಗೆ ಬಂಗಾರದ ಮೂಗುತಿಯನ್ನು ಆಶೀರ್ವದಿಸಿ ಭಕ್ತ ಮುದ್ದೇಗೌಡರಿಗೆ ಕರುಣಿಸಿದ್ದರು. ಪ್ರಸ್ತುತ ಸುಮಾರು ₹ 1.50 ಕೋಟಿ ವೆಚ್ಚದಲ್ಲಿ ನೂತನ ಶಿಲಾ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಪ್ರಮುಖ ಶಕ್ತಿಕ್ಷೇತ್ರವಾಗಿ ಅಭಿವೃದ್ಧಿಯಾಗಲಿದೆ ಎಂದು ಶ್ರೀ ಚೇತನ್ ಮರಿದೇವರು ಹೇಳಿದರು.ಐನಳ್ಳಿ ಪ್ರಶಾಂತ್ ದೇವರು, ಕೋಡಿಮಠದ ಏಜೆಂಟ್ ಎಚ್.ಸಿ. ಮಹದೇವಪ್ಪ ಸೇರಿದಂತೆ ಭಕ್ತರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.