ಧಾರವಾಡ:
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ತಡೆಯಲು ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿಸಲು ಕೈಜೋಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕರೆ ನೀಡಿದರು.ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬಳಿಯ ಸಿ.ಎಸ್. ಪಾಟೀಲ ಕಲ್ಯಾಣ ಮಂಟಪದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಧಿಕಾರಿಗಳ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳದಿಂದ ಕರ್ನಾಟಕಕ್ಕೆ ಬಂದಿರುವ ಬಾಂಗ್ಲಾದೇಶದ ನುಸುಳುಕೋರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಆತಂಕವಿದ್ದು, ಬಿಜೆಪಿ ಕಾರ್ಯಕರ್ತರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕೆಂದು ಎಂದು ಹೇಳಿದರು.ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತು ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ನಂಬಿಕೊಂಡು ಪಕ್ಷ ಸಂಘಟನೆ ಮಾಡಿದವರಿಗೆ ಉತ್ತಮ ಸ್ಥಾನಮಾನ ಸಿಗಲಿವೆ. ನಮ್ಮ ಪಕ್ಷದಲ್ಲಿ ಹಳಬರು ಹಾಗೂ ಹೊಸಬರೆಂಬ ಭೇದವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ಉಪ ಮೇಯರ್ ರತ್ನಾಬಾಯಿ ನಾಝರೆ, ಬಿಜೆಪಿ ಮುಖಂಡ ಶಂಕರ ಮುಗದ, ಶಂಕರ ಕೊಮಾರ ದೇಸಾಯಿ, ಕುಮಾರ ದೇಸಾಯಿ, ಶಶಿಮೌಳಿ ಕುಲಕರ್ಣಿ, ಜಯತೀರ್ಥ ಕಟ್ಟಿ, ಗುರುನಾಥ ಗೌಡ, ವಿಠ್ಠಲ ಪೂಜಾರ, ನಿಜನಗೌಡ ಪಾಟೀಲ ಸೇರಿದಂತೆ ಇತರರಿದ್ದರು.