ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಡೆಂಘೀ ಜ್ವರ ತಡೆಗಟ್ಟಲು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳ ನಾಶ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಂತರಾಜು ಹೇಳಿದರು.ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ ಪ್ರಯುಕ್ತ ತಾಲೂಕು ಮಟ್ಟದಲ್ಲಿ ಹಾಸ್ಟೆಲ್, ವಸತಿ ಶಾಲಾ ವಾರ್ಡನ್ ಹಾಗೂ ಸಿಬ್ಬಂದಿಗೆ ಏರ್ಪಡಿಸಿದ್ದ ಅಡ್ವೋಕೆಸಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ದಂತಹ ರೋಗಗಳು ಹರಡಬಹುದು. ಪ್ರತಿಯೊಬ್ಬರೂ ಸೊಳ್ಳೆಗಳ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದರು.ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ಗಣೇಶ್ ಪ್ರಸಾದ್ ಮಾತನಾಡಿ, ಮಕ್ಕಳಲ್ಲಿ ಜ್ವರ ಕಂಡು ಬಂದರೆ ರಕ್ತ ಪರೀಕ್ಷೆ ಮಾಡಿಸಬೇಕು. ನಿಲಯ ಪಾಲಕರು ಮತ್ತು ಸಿಬ್ಬಂದಿ ವಸತಿ ನಿಲಯಗಳ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ನಂತರ ಸೊಳ್ಳೆಗಳ ಬೆಳವಣಿಗೆ ಹಂತಗಳ ಬಗ್ಗೆ ಲಾರ್ವಾಗಳ ಪ್ರಾತ್ಯಕ್ಷಿಕೆಯೊಂದಿಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.ಕಾರ್ಯಾಗಾರದಲ್ಲಿ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮೀ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಫಣೀಂದ್ರ, ಕೃಷ್ಣೇಗೌಡ, ಚಂದನ, ರಮ್ಯಾ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಖಾಸಗಿ ವಸತಿ ನಿಲಯಗಳ ವಾರ್ಡನ್, ಸಿಬ್ಬಂದಿ, ಅಡುಗೆ ಸಿಬ್ಬಂದಿ ಇದ್ದರು.