ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಿತ್ತೂರ ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯ ಮತ್ತು ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತ ಆಶ್ರಯದಲ್ಲಿ ಮೇ 18 ರಂದು ಬೆಳಗ್ಗೆ 10 ಗಂಟೆಗೆ ಕಿತ್ತೂರು ಕೋಟೆಯ ಆವರಣದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ-2026ರ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಜರುಗಲಿವೆ ಎಂದು ಕ್ಯೂರೇಟರ್ ರಾಘವೇಂದ್ರ ಮತ್ತು ಕಿತ್ತೂರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.2026ರ ಮಾರ್ಚ್/ಏಪ್ರಿಲ್ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ, ದ್ವಿತೀಯ ಭಾಷೆ ಕನ್ನಡ ವಿಷಯದಲ್ಲಿ 100ಕ್ಕೆ100 ಅಂಕ ಗಳಿಸಿದ ಕಿತ್ತೂರ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಕನ್ನಡ ಪುಸ್ತಕ ಮತ್ತು ಕನ್ನಡ ಕೊರಳು ಪಟ್ಟಿ ನೀಡಿ ಗೌರವಿಸಲಾಗುತ್ತದೆ. ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ-2026 ರ ದಿನಾಚರಣೆ ಪ್ರಯುಕ್ತ ಡಾ.ಸದಾಶಿವ ಮುಗಳಿ ಉಪನ್ಯಾಸಕರು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯ ಬೆಳಗಾವಿ ಅವರು ವಿಭಜಿತ ಜಗತ್ತನ್ನು ಒಂದುಗೂಡಿಸುವ ವಸ್ತುಸಂಗ್ರಹಾಲಯ ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು ಎಂದು ತಿಳಿಸಿದ್ದಾರೆ.ಸಾನ್ನಿಧ್ಯವನ್ನು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕಿತ್ತೂರಿನ ಶಾಸಕರಾದ ಬಾಬಾಸಾಹೇಬ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಚನ್ನಮ್ಮನ ಕಿತ್ತೂರಿನ ತಹಸೀಲ್ದಾರ್ ಕಲಗೌಡ ಪಾಟೀಲ, ಸಿ.ಪಿ.ಐ ಶಿವಾನಂದ ಗುಡುಗನಟ್ಟಿ , ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ.ತುಬಾಕಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ ಆಗಮಿಸಲಿದ್ದಾರೆ. ಕ್ಯೂರೇಟರ್ ರಾಘವೇಂದ್ರ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಆಮಂತ್ರಿತ ಗಣ್ಯರು, ಕಸಾಪ ಪದಾಧಿಕಾರಿಗಳು, ಶಿಕ್ಷಕರು, ಪಾಲಕರು, ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ವಸ್ತು ಸಂಗ್ರಹಾಲಯ ದ ಸಿಬ್ಬಂದಿ ಉಪಸ್ಥಿತರಿರುವರು ಎಂದು ಕಾರ್ಯಕ್ರಮ ಸಂಘಟಿಕರು ತಿಳಿಸಿದ್ದಾರೆ.