ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಇಬ್ಬರಿಗೆ ಗೌರವ ಡಾಕ್ಟರೇಟ್; 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 112 ಜನರಿಗೆ ಪದವಿ ಪ್ರದಾನ ಮಾಡಲಾಗವುದು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಇಬ್ಬರಿಗೆ ಗೌರವ ಡಾಕ್ಟರೇಟ್; 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 112 ಜನರಿಗೆ ಪದವಿ ಪ್ರದಾನ ಮಾಡಲಾಗವುದು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ತಿಳಿಸಿದರು.ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.12ರಂದು ನಗರದ ಹೊರವಲಯದಲ್ಲಿರುವ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಬೀದರ್ ವಿಶ್ವವಿದ್ಯಾಲಯದ ಆವರಣದಲ್ಲಿ ಘಟಿಕೋತ್ಸವ ಆಯೋಜಿಸಲು ಸೂಕ್ತ ಸ್ಥಳಾವಕಾಶದ ಕೊರತೆಯ ಹಿನ್ನೆಲೆಯಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಘಟಿಕೋತ್ಸವವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉಪಸ್ಥಿತರಿರುವರು. ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಶಿವಯ್ಯ ಸ್ವಾಮಿ ಕಮಠಾಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಎಸ್.ಎಂ. ಜನವಾಡಕರ್ ಅವರಿಗೆ ಬೀದರ್ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ತಿಳಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪ್ರದಾನ ಮಾಡಲಾಗುವುದು. ಒಟ್ಟು 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತಿದ್ದು, ಇದರಲ್ಲಿ ಓರ್ವ ಬಿ.ಎಡ್. ವಿದ್ಯಾರ್ಥಿನಿ ಹಾಗೂ 19 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸೇರಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಒಟ್ಟು 112 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವಾಗಿರುವುದರಿಂದ ಕಾರ್ಯಕ್ರಮವು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರೊ.ಬಿ.ಎಸ್.ಬಿರಾದಾರ್ ಹೇಳಿದರು.ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶೈಕ್ಷಣಿಕ ದಾಖಲೆಗಳನ್ನು ಒದಗಿಸಲು ಕ್ರಮ ಕೈಗೊಳ್ಳ ಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಅಂಕ ಪಟ್ಟಿ, ಪಾಸಿಂಗ್ ಉತ್ತಿರ್ಣ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ಪ್ರಮಾಣ ಪತ್ರಗಳನ್ನು ವಿಶ್ವವಿದ್ಯಾಲಯದಿಂದ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ದಾಖಲೆಗಳು ಸಮಯಕ್ಕೆ ಸರಿಯಾಗಿ ದೊರೆಯುವುದರಿಂದ ಅವರು ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಇತರ ಅವಕಾಶಗಳಿಗೆ ಅರ್ಜಿ ಸಲ್ಲಿಸುವಾಗ ಅನುಕೂಲವಾಗಲಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪರಮೇಶ್ವರ ನಾಯಕ್, ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ವೈಷ್ಣವಿ ಪಾಟೀಲ್, ಶಾಂತಲಿಂಗ ಸಾವಳಗಿ, ಶಿವನಾಥ ಪಾಟೀಲ್, ವಿಠಲದಾಸ್ ಪ್ಯಾಗೆ, ವೈಷ್ಣವಿ ಪಾಟೀಲ್, ಸಚಿನ್ ಮಲ್ಕಾಪುರೆ, ಅಬ್ದುಲ್ ಸತ್ತಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.