ಸಾರಾಂಶ
ಕನ್ನಡಪ್ರಭ ವಾರ್ತೆ ಭದ್ರಾವತಿ
ಪ್ರೊ.ಬಿ.ಕೃಷ್ಣಪ್ಪರವರು ೧೯೭೪-೭೫ರಲ್ಲಿ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಆಶಯಗಳನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಚಳುವಳಿಯನ್ನು ಆರಂಭಿಸಿದರು. ಪ್ರಸ್ತುತ ಸಮಿತಿ ೫೦ ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ. ಜ.೧೯ರಂದು ಸುವರ್ಣ ಮಹೋತ್ಸವಕ್ಕೆ ನಗರದಲ್ಲಿ ಚಾಲನೆ ನೀಡಲಾಗುವುದು ಎಂದು ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ತಿಳಿಸಿದರು.ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶದಲ್ಲಿ ಆರ್ಎಸ್ಎಸ್ ಹೇಗೆ ತನ್ನದೇ ಆದ ಸೈದ್ಧಾಂತಿಕ ನೆಲಗಟ್ಟಿನಲ್ಲಿ ಬಲಿಷ್ಠವಾಗಿ ಬೆಳೆದು ನಿಂತಿದೆಯೋ, ಅದೇ ರೀತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಎಲ್ಲಾ ೩೧ ಜಿಲ್ಲೆಗಳಲ್ಲಿ ಬೆಳೆದು ನಿಂತಿದೆ. ಪ್ರೊ. ಬಿ.ಕೃಷ್ಣಪ್ಪ ಅವರು ೧೯೭೪ರಲ್ಲಿ ವಿಐಎಸ್ಎಲ್ ಕಾರ್ಮಿಕನ ಜೊತೆ ನಡೆದ ಅಸ್ಪೃಶ್ಯತೆ ನಡವಳಿಕೆ ಖಂಡಿಸಿ ಕಾರ್ಮಿಕರನ್ನು ಸಂಘಟಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಳವಳಿಗೆ ನಾಂದಿ ಹಾಡಿದರು ಎಂದರು.
ಸಮಿತಿ ನಡೆಸಿದ ಹೋರಾಟದ ಫಲವಾಗಿ ಬಗರ್ಹುಕುಂ ಚಳವಳಿ, ಬೆತ್ತಲೆ ಸೇವೆ ಪದ್ಧತಿ ನಿಷೇಧ, ಜಾತಿನಿಂದನೆ ಕಾಯಿದೆ, ಪಿಟಿಸಿಲ್ ಕಾಯಿದೆ ಸೇರಿದಂತೆ ಅನೇಕ ಕಾಯಿದೆ ಗಳು ಜಾರಿಗೆ ಬಂದಿವೆ ಎಂದರು.ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಶೋಷಿತರ ಧ್ವನಿಯಾಗಿ ಜ. ೧೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ಸಾಗಲಿದೆ. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮವನ್ನು ಶಾಕ ಬಿ.ಕೆ.ಸಂಗಮೆಶ್ವರ್ ಉದ್ಘಾಟಿಸಲಿದ್ದಾರೆ. ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜ.೨೦ ಮತ್ತು ೨೧ರಂದು ಬಿಜಾಪುರ, ಆಲಮಟ್ಟಿ ಡ್ಯಾಂ, ಹರ್ಡೇಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಅಧ್ಯಯನ ಶಿಬಿರವನ್ನು ಏರ್ಪಡಿಸಲಾಗಿದೆ. ಅದೇ ರೀತಿ ಜಿಲ್ಲಾಮಟ್ಟದಲ್ಲಿ ಸಹ ಸಮಾವೇಶಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಕೆ.ರಂಗನಾಥ, ಪ್ರಮುಖರಾದ ಕಾಣಿಕ್ ರಾಜ್, ಸಂದೀಪ, ಈಶ್ವರಪ್ಪ, ನರಸಿಂಹ, ಪ್ರಸನ್ನ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.