ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಕ್ರಮ ಡ್ರಗ್ಸ್ ಮತ್ತು ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿ ಮಾಹಿತಿ ನೀಡಲು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಕ್ಯೂಆರ್ ಕೋಡ್‌ಗೆ ಉತ್ತಮ ಸ್ಪಂದನೆ ದೊರಕುತ್ತಿದ್ದು, ಸಾರ್ವಜನಿಕರು ಅನಾಮಧೇಯರಾಗಿ ಈ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಮಾಹಿತಿ ನೀಡುತ್ತಿದ್ದಾರೆ. ಈವರೆಗೆ ಈ ಕ್ಯೂಆರ್ ಕೋಡ್‌ಗಳ ಮೂಲಕ ಸುಮಾರು 193 ಮಾಹಿತಿ - ದೂರುಗಳು ದಾಖಲಾಗಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಕ್ರಮ ಡ್ರಗ್ಸ್ ಮತ್ತು ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿ ಮಾಹಿತಿ ನೀಡಲು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಕ್ಯೂಆರ್ ಕೋಡ್‌ಗೆ ಉತ್ತಮ ಸ್ಪಂದನೆ ದೊರಕುತ್ತಿದ್ದು, ಸಾರ್ವಜನಿಕರು ಅನಾಮಧೇಯರಾಗಿ ಈ ಕ್ಯೂಆರ್ ಕೋಡ್‌ನ್ನು ಸ್ಕ್ಯಾನ್ ಮಾಡಿ ಮಾಹಿತಿ ನೀಡುತ್ತಿದ್ದಾರೆ. ಈವರೆಗೆ ಈ ಕ್ಯೂಆರ್ ಕೋಡ್‌ಗಳ ಮೂಲಕ ಸುಮಾರು 193 ಮಾಹಿತಿ - ದೂರುಗಳು ದಾಖಲಾಗಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಅವರು ಜಿಲ್ಲಾ ಪೊಲೀಸ್ ವತಿಯಿಂದ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾದ ನಶಾ ಮುಕ್ತ ಭಾರತ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಕ್ಯೂಆರ್ ಕೋಡ್ ಮೂಲಕ ಬಂದ ವರದಿಯಂತೆ ಹಲವು ಪ್ರಕರಣಗಳು ದಾಖಲಾಗಿವೆ. ಅನೇಕ ನಶೆದಾರರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಹಲವು ಡ್ರಗ್ಸ್ ಪೆಡ್ಲರ್ಸ್‌ಗಳನ್ನು ಬಂಧಿಸಲಾಗಿದೆ. ಇದರ ಪರಿಣಾಮ ಉಡುಪಿಯಲ್ಲಿ ಮುಕ್ತವಾಗಿ ಮಾದಕ ದ್ರವ್ಯ ಬಳಸುವುದು ಕಡಿಮೆ ಆಗಿದೆ ಎಂದು ಅವರು ಹೇಳಿದರು. ಹಿರಿಯ ಮನೋ ವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಮೊದಲು ನಮ್ಮನ್ನು ಕಿಂಗ್‌ಗಳು ಆಳುತ್ತಿದ್ದರೆ ಈಗ ಪಾನ್‌ಕಿಂಗ್, ಸ್ಪೋಕಿಂಗ್, ಡ್ರಿಂಕಿಂಗ್‌ಗಳು ಆಳುತ್ತಿವೆ. ಭಾರತದಲ್ಲಿ 13ನೇ ವಯಸ್ಸಿಗೆ ಮಕ್ಕಳು ಕೆಟ್ಟ ಚಟಗಳನ್ನು ಆರಂಭಿಸುತ್ತಾರೆ. ಆದುದರಿಂದ ಅದರ ಜಾಗ್ರತೆ ವಹಿಸಬೇಕಾಗಿದೆ ಎಂದು ಹೇಳಿದರು. ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಮಾತನಾಡಿ, ಮಾದಕ ದ್ರವ್ಯದ ಚಟಕ್ಕೆ ಹೆಣ್ಣು ಮಕ್ಕಳು ಕೂಡ ಹೆಚ್ಚು ಆಕರ್ಷಿತರಾಗಿ ತಮ್ಮ ಬದುಕು ಕಳೆದುಕೊಳ್ಳುತ್ತಿರುವುದು ದುರಂತ. ಮಾದಕ ದ್ರವ್ಯ ವ್ಯಸನ ದೇಶದ ಅಭಿವೃದ್ಧಿ ಮಾರಕ. ಆದುದರಿಂದ ಇದನ್ನು ತಡೆಯುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಉಪಸ್ಥಿತರಿದ್ದರು. ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಸ್ವಾಗತಿಸಿದರು. ಮಲ್ಪೆ ಪೊಲೀಸ್ ವೃತ್ತ ನಿರೀಕ್ಷರಕ ರಾಮಚಂದ್ರ ನಾಯ್ಕ್ ವಂದಿಸಿದರು. ನಗರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸುರೇಂದ್ರ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ ಎದುರು ಅಭಿಯಾನದ ಜಾಥಕ್ಕೆ ಚಾಲನೆ ನೀಡಲಾಯಿತು.