ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಿತಿ ಹಾಗೂ ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ವತಿಯಿಂದ ಆಗಸ್ಟ್‌ 29ರಂದು ಸಂಜೆ 4ಕ್ಕೆ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಬೆಂಗಳೂರು

ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಿತಿ ಹಾಗೂ ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ವತಿಯಿಂದ ಆಗಸ್ಟ್‌ 29ರಂದು ಸಂಜೆ 4ಕ್ಕೆ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಜ್ಜನ ರಾಜಕಾರಣಿ, ಉತ್ತಮ ಆಡಳಿತಗಾರ, ಪ್ರಾಮಾಣಿಕ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ತತ್ವ ಸಿದ್ಧಾಂತಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯಾದ್ಯಂತ ಅವರ ಜನ್ಮಶತಮಾನೋತ್ಸವ ಆಚರಣೆಗೆ ಯೋಜನೆ ರೂಪಿಸಲಾಗಿದೆ ಎಂದರು.

ಆಗಸ್ಟ್‌ 29ರಂದು ರಾಮಕೃಷ್ಣ ಹೆಗಡೆ ಜನ್ಮಶತಮಾನೋತ್ಸವವನ್ನು ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಸ್ಥಿತರಿರುವರು ಎಂದು ಹೇಳಿದರು.

ಮಧ್ಯಾಹ್ನ 3ಕ್ಕೆ ದಿ ಸುಬ್ರಮಣಿಯಂ ಅಕಾಡೆಮಿ ಆಫ್‌ ಪರ್ಫಾರ್ಮಿಂಗ್‌ ಆರ್ಟ್ಸ್‌ ವತಿಯಿಂದ ಡಾ.ಬಿಂದು ಸುಬ್ರಮಣಿಯಂ ಮತ್ತು ಡಾ.ಅಂಬಿ ಸುಬ್ರಮಣಿಯಂ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರು ಮೌಲ್ಯಾಧಾರಿತ ರಾಜಕಾರಣ, ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಹೊಸ ದಿಕ್ಕು ತೋರಿಸಿದ ಅಪ್ರತಿಮ ನಾಯಕ. ಹೆಗಡೆ ಅವರು ಅತ್ಯಂತ ಪ್ರಾಮಾಣಿಕವಾಗಿ ಸಮಾಜ ಸೇವೆ ಸಲ್ಲಿಸಿದ್ದು, ವಿವಿಧ ಹಂತಗಳಲ್ಲಿ ತಮ್ಮ ಅಪಾರ ಅನುಭವವನ್ನು ದೇಶದ ಅಭಿವೃದ್ಧಿಗೆ ಬಳಸಿಕೊಂಡಿದ್ದರು ಎಂದರು.

ಪಂಚಾಯತ್ ರಾಜ್ ವ್ಯವಸ್ಥೆಗೆ ಹೊಸ ರೂಪ ನೀಡಿದವರು ಹೆಗಡೆ. ಎಲ್ಲ ಧರ್ಮ, ಜಾತಿ ಮತ್ತು ವರ್ಗಗಳ ಜನರನ್ನು ಸಮಾನವಾಗಿ ಕಾಣುತ್ತಿದ್ದ ಅವರು ಜಾತಿವಾದದ ರಾಜಕಾರಣದಿಂದ ದೂರವಿದ್ದರು. ಮೌಲ್ಯಾಧಾರಿತ ರಾಜಕಾರಣದ ನಿಜವಾದ ಅರ್ಥ ದೇಶಕ್ಕೆ ಪರಿಚಯಿಸಿದವರಲ್ಲಿ ರಾಮಕೃಷ್ಣ ಹೆಗಡೆ ಪ್ರಮುಖರು. ಇಂದಿನ ರಾಜಕೀಯದಲ್ಲಿ ಜಾತಿ, ಹಣ ಸೇರಿದಂತೆ ಹಲವು ಅಂಶಗಳು ಪ್ರಭಾವ ಬೀರುತ್ತಿರುವ ಸಂದರ್ಭದಲ್ಲಿ ಹೆಗಡೆ ಅವರ ಮೌಲ್ಯಗಳು ಮತ್ತು ರಾಜಕೀಯ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಆದ್ದರಿಂದ ಶತಮಾನೋತ್ಸವ ಆಚರಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್, ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಮಮತಾ ನಿಚಾನಿ, ಟಿ.ಪ್ರಭಾಕರ್ ಹಾಜರಿದ್ದರು.