ಬನವಾಸಿ ಬಸ್ ನಿಲ್ದಾಣ ದುರವಸ್ಥೆ ಕಂಡು ಮರುಗುತ್ತಿರುವ ಪ್ರವಾಸಿಗರು

| Published : Jul 06 2025, 01:48 AM IST

ಬನವಾಸಿ ಬಸ್ ನಿಲ್ದಾಣ ದುರವಸ್ಥೆ ಕಂಡು ಮರುಗುತ್ತಿರುವ ಪ್ರವಾಸಿಗರು
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡದ ಮೊದಲ ರಾಜಧಾನಿ ಬನವಾಸಿಯ ಬಸ್ ನಿಲ್ದಾಣದ ಶೋಚನೀಯ ಸ್ಥಿತಿ ಕಂಡು ಪ್ರವಾಸಿಗರು ಹಾಗೂ ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಿರುವುದಲ್ಲದೇ ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಶಿರಸಿ: ಕನ್ನಡದ ಮೊದಲ ರಾಜಧಾನಿ ಬನವಾಸಿಯ ಬಸ್ ನಿಲ್ದಾಣದ ಶೋಚನೀಯ ಸ್ಥಿತಿ ಕಂಡು ಪ್ರವಾಸಿಗರು ಹಾಗೂ ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಿರುವುದಲ್ಲದೇ ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬನವಾಸಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿನ ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಸಾರಿಗೆ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿಕೊಂಡಿದ್ದು, ಕಳೆದ ಒಂದು ವಾರದಿಂದ ಬನವಾಸಿ ಬಸ್ ನಿಲ್ದಾಣ ಕಸದ ತೊಟ್ಟಿಯಾದಂತಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರು, ಗ್ರಾಮೀಣ ಪ್ರದೇಶದ ಪ್ರಯಾಣಿಕರು ಭೇಟಿ ನೀಡುವ ಈ ನಿಲ್ದಾಣ ದುರ್ವಾಸನೆಯಿಂದ ಕೂಡಿದ್ದು, ಪ್ರಯಾಣಿಕರು ಮೂಗು ಮುಚ್ಚಿಕೊಂಡು ನಿಲ್ಲುವಂತಾಗಿದೆ. ಕಳೆದ ಒಂದು ವಾರದಿಂದ ಬಸ್ ನಿಲ್ದಾಣದಲ್ಲಿ ಕಸ ಗುಡಿಸದೇ ಸ್ವಚ್ಛ ಮಾಡದಿರುವುದೇ ಇದಕ್ಕೆ ಕಾರಣ. ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ, ಹೀಗಾಗಿ ಆತ ಕೆಲಸಕ್ಕೆ ಬಂದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಪ್ರಯಾಣಿಕರು, ಸ್ಥಳೀಯರು ಹಲವು ಬಾರಿ ಘಟಕ ವ್ಯವಸ್ಥಾಪಕರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಬರುವ ಪ್ರವಾಸಿಗರು ಇಲ್ಲಿನ ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮೀಣ ಭಾಗದಿಂದ ಪ್ರತಿನಿತ್ಯ ಬಸ್ ನಿಲ್ದಾಣಕ್ಕೆ ಬರುವ ಸಾವಿರಾರು ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ.

ಬಸ್ ನಿಲ್ದಾಣದಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ, ಕುಡಿಯುವ ನೀರಿನ ಟ್ಯಾಂಕ್ ಇದ್ದರೂ ಸ್ವಚ್ಛತೆ ಇಲ್ಲವಾಗಿದೆ. ಕುಡಿಯುವ ನೀರಿನ ನಲ್ಲಿಯ ಸುತ್ತಲೂ ಪಾಚಿ ಕಟ್ಟಿರುವುದು ಒಂದು ಭಾಗವಾದರೆ, ಗುಟ್ಕಾ, ಎಲೆ ಅಡಕೆ ತಿಂದು ಅಲ್ಲಿಯೇ ಉಗುಳುವುದರಿಂದ ಕುಡಿಯುವ ನೀರಿನ ಜಾಗ ಗಲೀಜು ಆಗಿದೆ.

ಶೌಚಾಲಯದ ನಿರ್ವಹಣೆ ಸರಿಯಾಗಿಲ್ಲದ ಕಾರಣ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಸಮರ್ಪಕವಾದ ನೀರಿನ ವ್ಯವಸ್ಥೆ ಇಲ್ಲದೇ ಇರುವುದು ಇದಕ್ಕೆ ಮುಖ್ಯ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದೆ.

ನಿಲ್ದಾಣದಲ್ಲಿ ಸಮರ್ಪಕ ಲೈಟಿಂಗ್ ವ್ಯವಸ್ಥೆಯಿಲ್ಲದ ಕಾರಣ ಕಟ್ಟಡ ಪಕ್ಕದಲ್ಲಿಯೇ ಪ್ರಯಾಣಿಕರು ಮೂತ್ರ ವಿಸರ್ಜನೆ ಮಾಡುತ್ತಾರೆ. ಶೌಚಾಲಯ ಮತ್ತು ಬಸ್ ನಿಲ್ದಾಣ ಆವರಣದಲ್ಲಿ ಗಿಡ-ಗಂಟಿಗಳು ಬೆಳೆದಿವೆ. ಅಲ್ಲಲ್ಲಿ ಕಸದ ರಾಶಿ, ಬಣ್ಣ ಕಾಣದ ಕಟ್ಟಡ, ಬಸ್ ನಿಲ್ದಾಣದ ಮುಂಭಾಗದಲ್ಲಿ ಡಾಂಬರ್ ಇಲ್ಲದೇ ಅಲ್ಲಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಗುಂಡಿಗಳು ಬನವಾಸಿಯ ಅಂದಕ್ಕೆ ಮಸಿ ಬಳಿಯುವಂತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆನ್ನುವುದು ಪ್ರಜ್ಞಾವಂತ ನಾಗರಿಕರ ಆಗ್ರಹವಾಗಿದೆ. ಶೀಘ್ರ ಸ್ವಚ್ಛತಾ ಕಾರ್ಯ: ಬನವಾಸಿ ಬಸ್ ನಿಲ್ದಾಣದ ಅವ್ಯವಸ್ಥೆ ನನ್ನ ಗಮನಕ್ಕೆ ಬಂದಿದೆ. ಆರೋಗ್ಯ ಸಮಸ್ಯೆಯಾಗಿರುವುದರಿಂದ ಬಸ್ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ರಜೆಯಲ್ಲಿದ್ದಾರೆ. ಶೀಘ್ರ ಸ್ವಚ್ಛತಾ ಕಾರ್ಯ ಮಾಡಿಸಲಾಗುವುದು ಎಂದು ಶಿರಸಿ ಘಟಕ ವ್ಯವಸ್ಥಾಪಕ ಎಸ್.ಎಂ. ಕುರ್ತಕೋಟಿ ಹೇಳಿದರು.ಹದಿನೈದು ದಿನಗಳಿಂದ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಣಾಧಿಕಾರಿಗಳಿಲ್ಲ. ನಿಲ್ದಾಣದಲ್ಲಿ ಕಸ ಗುಡಿಸದೇ ಅಲ್ಲಲ್ಲಿ ಕಸದ ರಾಶಿ ತುಂಬಿದೆ. ಬಸ್ ನಿಲ್ದಾಣದ ಅವ್ಯವಸ್ಥೆಯ ಬಗ್ಗೆ ಡಿಪೋ ಮ್ಯಾನೇಜರ್ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸಾರಿಗೆ ಇಲಾಖೆ ಈ ಬಗ್ಗೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಬನವಾಸಿ ಗ್ರಾಮಸ್ಥ ಬೆನಕ ನಾಯ್ಕ ಹೇಳಿದರು.