ಅಡಕೆ ಎಲೆಚುಕ್ಕೆ ರೋಗ, ಮಾವು ಬೆಳೆಯ ಕೀಟ ನಿರ್ವಹಣೆ ಬಗ್ಗೆ ಮಾಹಿತಿ
ಕನ್ನಡಪ್ರಭ ವಾರ್ತೆ ಮುಂಡಗೋಡ೨೦೨೫-೨೬ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗದ ನಿರ್ವಹಣೆ ಹಾಗೂ ಮಾವು ಬೆಳೆಯ ರೋಗ ಮತ್ತು ಕೀಟಗಳ ನಿರ್ವಹಣಾ ಕ್ರಮಗಳ ಬಗ್ಗೆ ಮುಂಡಗೋಡದ ದೇಶಪಾಂಡೆ ಆರ್.ಸೆಟ್ ಸಭಾಭವನದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೃಷ್ಣ ಕುಳ್ಳೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂಡಗೋಡ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು ೩೯೦೦ ಹೆಕ್ಟೇರ್ ಪ್ರದೇಶದಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅಡಕೆಗೆ ಕೊಳೆರೋಗ ಹಾಗೂ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದೆ. ಈ ಹಂತದಲ್ಲಿ ರೈತರಿಗೆ ಸೂಕ್ತ ಮಾರ್ಗದರ್ಶನ ಅಗತ್ಯವಿದೆ. ಹೊಸ ಆಧುನಿಕ ತಂತ್ರಜ್ಞಾನ ಹಾಗೂ ಸುಧಾರಿತ ಬೇಸಾಯಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಸಲುವಾಗಿ ತೋಟಗಾರಿಕೆ ವಿಷಯ ತಜ್ಞರನ್ನು ಆಹ್ವಾನಿಸಿ, ಕ್ಷೇತ್ರ ಮಟ್ಟದಲ್ಲಿ ರೈತರಿಗೆ ನಿಖರ ಮಾಹಿತಿ ನೀಡಲು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ. ಮೃತ್ಯುಂಜಯ ಕಿತ್ತೂರಮಠ ಅವರು, ಮಾವು ಹಾಗೂ ಅಡಕೆ ಬೆಳೆಗೆ ಬರುವ ರೋಗ ಮತ್ತು ಕೀಟಬಾಧೆಗಳ ನಿಯಂತ್ರಣ ಕ್ರಮಗಳ ಬಗ್ಗೆ ರೈತರಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.ತೋಟಗಾರಿಕೆ ತಜ್ಞ ಚನ್ನಬಸವರಾಜ ತೋಟಗಾರಿಕೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಹಾಗೂ ಬೋರ್ಡೋ ದ್ರಾವಣ ತಯಾರಿಸುವ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ದೀಪಾ ಶೆಟ್ಟರ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು.
ಗಣೇಶ ಲಮಾಣಿ ತೋಟಗಾರಿಕೆಯಲ್ಲಿ ಸಾವಯವ ಕೃಷಿ ಮಾಡುವುದರಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ತಿಳಿಸಿದರು. ಈ ವೇಳೆ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ರಮೇಶ ಜಮಖಂಡಿ, ರಾಮಪ್ಪ ನಡುವಿನಮನಿ, ವೀರೇಶ ತಾಳಿಕೋಟಿ, ಶಾಂತಕುಮಾರ ಮತ್ತು ಸುಮಾರು ೧೦೦ ಆಸಕ್ತ ಅಡಕೆ ಹಾಗೂ ಮಾವು ಬೆಳೆಗಾರರು ಉಪಸ್ಥಿತರಿದ್ದರು.