ಹಾವೇರಿ:ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ವಾಕರಸಾ ಸಂಸ್ಥೆಯ ಹಾವೇರಿ ಜಿಲ್ಲಾ ನೌಕರರ ಸಂಘ ಬೆಂಬಲ ಸೂಚಿಸಿದೆ. ಆದರೆ ಸ್ಥಳೀಯವಾಗಿ ಯಾವುದೇ ಪ್ರತಿಭಟನೆ ನಡೆಯದ ಕಾರಣ ಬಸ್‌ಗಳ ಸಂಚಾರ ಎಂದಿನಂತಿತ್ತು.ಹಿಂಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ ನೌಕರರ ಸಂಘವು ಪ್ರತಿಭಟನೆಗೆ ಬೆಂಬಲ ಸೂಚಿಸಿದೆ, ಅಲ್ಲದೇ ಸಂಘದ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ 20ಕ್ಕೂ ಹೆಚ್ಚು ಜನ ಬೆಂಗಳೂರಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸರ್ಕಾರದ ಕ್ರಮ ಮತ್ತು ಒಕ್ಕೂಟದ ಹಿರಿಯ ಪದಾಧಿಕಾರಿಗಳ ನಿರ್ಣಯ ಪರಿಗಣಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಜೆ. ಅವರು ತಿಳಿಸಿದ್ದಾರೆ.ಬಸ್ ಸಂಚಾರ ಎಂದಿನಂತೆ: ಸದ್ಯ ಸ್ಥಳೀಯವಾಗಿ ಯಾವುದೇ ಪ್ರತಿಭಟನೆ ನಡೆಯದ ಕಾರಣ ಜಿಲ್ಲಾದ್ಯಂತ ಬಸ್ ಸಂಚಾರ ಎಂದಿನಂತಿತ್ತು. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಉದ್ಯೋಗಿಗಳು, ಗ್ರಾಮೀಣ ಭಾಗದಿಂದ ಬರುವವರಿಗೆ ತೊಂದರೆ ಆಗಬಹುದು ಎಂಬ ಆತಂಕ ಹುಸಿಯಾಯಿತು. ಜನಜೀವನದ ಮೇಲೆ ಯಾವುದೇ ಪರಿಣಾಮ ಆಗಲಿಲ್ಲ.